ಉಡುಪಿ:ವಿಕಲಚೇತನ ಸ್ನೇಹಿ ವಾತಾವರಣ ಸಮಾಜದ ಕರ್ತವ್ಯ: ಶ್ಯಾಮಲಾ ಸಿ.ಕೆ

ಉಡುಪಿ: ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗೆ ಸರಕಾರ ಮತ್ತು ಸಮಾಜ ಕೊಡಮಾಡುವ ಸೌಲಭ್ಯಗಳು ಅನುಕಂಪವಲ್ಲ, ಅದು ಸಹಾನುಭೂತಿ ವಿಕಲಚೇತನ ಸ್ನೇಹಿ ವಾತಾವರಣವನ್ನು ನಿರ್ಮಾಣ ಮಾಡುವುದು ನಾಗರೀಕ ಸಮಾಜದ ಕರ್ತವ್ಯ. ಈ ದೃಷ್ಟಿಯಿಂದ ಭಾರತ ಸುಗಮ್ಯ ಯಾತ್ರಾ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಹೇಳಿದರು.

ಅವರು ಮಂಗಳವಾರ ನಗರದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ, ಭಾರತೀಯ ರೆಡ್‌ಕ್ರಾಸ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಮತ್ತು ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ಮತ್ತು ಎಪಿಡಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿವಿಧ ತಾಲೂಕುಗಳ ವಿವಿದ್ದೋದ್ದೇಶ ಕಾರ್ಯಕರ್ತರಿಗಾಗಿ ಹಮ್ಮಿಕೊಂಡ ಭಾರತ ಸುಗಮ್ಯ ಯಾತ್ರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಬೇಕಾಗುವ ಸೌಲಭ್ಯಗಳನ್ನು ಎಲ್ಲಾ ಕಟ್ಟಡಗಳಲ್ಲಿ ನಿರ್ಮಿಸುವ ಬಗ್ಗೆ ಜಾಗೃತಿ ಮೂಡಿಸುವುದು ಈ ಯೋಜನೆಯ ಉದ್ದೇಶ ಎಂದರು.

ಎಪಿಡಿ ಸಂಸ್ಥೆಯ ತರಬೇತುದಾರರಾದ ನಾಗರಾಜ ಭಾರತ್ ಸುಗಮ್ಯ ಯಾತ್ರಾದ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ವಿಕಲಚೇತನ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ನಿರೂಪಿಸಿದರು. ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀಯವರು ವಂದಿಸಿದರು