ಉಡುಪಿ: ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗ ಅವಕಾಶಗಳು ಕಡಿಮೆಯಾಗುತ್ತಿದೆ ಎನ್ನುವುದು ತಪ್ಪು ಕಲ್ಪನೆ ಇಂದಿಗೂ ಹೆಚ್ಚಿನ ಸಾರ್ವಜನಿಕ ಮತ್ತು ಖಾಸಗಿ ಸೇವಾ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಕೊರತೆಯಿಂದ ಹುದ್ದೆಗಳು ಖಾಲಿ ಇರುವುದನ್ನು ಕಾಣಬಹುದಾಗಿದೆ. ಕೇವಲ ತರಗತಿಯೊಳಗಿನ ಜ್ಞಾನಕ್ಕೆ ಸೀಮಿತವಾಗದೆ, ಸಂವಹನ ಮತ್ತು ವ್ಯವಹಾರ ಜ್ಞಾನವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಪೂರ್ಣ ಪ್ರಜ್ಞಾ ಇನ್ಸ್ಟಿಟ್ಯೂಟ್ಟ್ ಆಫ್ ಮ್ಯಾನೇಜ್ಮೆಂಟ್ನ ಹಿಂದಿನ ನಿರ್ದೇಶಕರಾದ ಡಾ. ಭರತ್ ವಿ ಅಭಿಪ್ರಾಯಪಟ್ಟರು.
ಇವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಸ್ನಾತಕೋತ್ತರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಸ್ನಾತಕೋತ್ತರ ವಿಭಾಗಗಳ 2024-25ನೇ ಸಾಲಿನ ವಿದ್ಯಾರ್ಥಿಗಳಿಗೆ ಪಿ.ಜಿ, ಎ.ವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಅಭಿವಿನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಉನ್ನತ ಶಿಕ್ಷಣದ ವಿದ್ಯಾರ್ಥಿಗಳು ಶಿಸ್ತು, ಸಾಮಾಜಿಕ ಮೌಲ್ಯ, ಗುಣಮಟ್ಟ ಮತ್ತು ಸಂಶೋಧನಾ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು. ಮೊಬೈಲ್ ತಂತ್ರಜ್ಞಾನದ ದುರ್ಬಳಕೆ ಮಾಡದೆ ಸದ್ಭಳಕೆಯಿಂದ ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಎಸ್ ಶೆಟ್ಟಿ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನಾ, ಐ.ಕ್ಯೂ.ಎ.ಸಿ ಸಂಚಾಲಕರಾದ ಪ್ರೊ. ಶ್ರೀಮತಿ ಅಡಿಗ ಮತ್ತು ಎಮ್.ಕಾಂ ವಿಭಾಗದ ಸಂಯೋಜಕರು ಶ್ರೀ ರವಿಪ್ರಸಾದ್ ಉಪಸ್ಥಿತರಿದ್ದರು.
ಸ್ನಾತಕೋತ್ತರ ವಿಭಾಗಗಳ ಸಂಯೋಜಕರಾದ ಪ್ರೊ. ಕೆ. ಶ್ರೀಧರ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕು. ಪ್ರಜ್ಞಾ ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯಶಾಸ್ತ ವಿಭಾಗದ ಸಹಾಯಕ ಪ್ರಧ್ಯಾಪಕರಾದ ಡಾ. ಅಬ್ದುಲ್ ರಜಾಕ್ ವಂದಿಸಿದರು.












