ಜ.17ರಿಂದ 23ರವರೆಗೆ ಉಡುಪಿ-ಮಂಗಳೂರಿನಲ್ಲಿ “ಕರ್ನಾಟಕ ಕ್ರೀಡಾಕೂಟ-2025”

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ಜಿಲ್ಲಾಡಳಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜ.17ರಿಂದ 23ರವರೆಗೆ ಉಡುಪಿ ಹಾಗೂ ಮಂಗಳೂರಿನಲ್ಲಿ ಕರ್ನಾಟಕ ಕ್ರೀಡಾಕೂಟ-2025 ಅನ್ನು ಆಯೋಜಿಸಲಾಗಿದೆ.

ಈ ಕ್ರೀಡಾಕೂಟದಲ್ಲಿ 25ವಿವಿಧ ಕ್ರೀಡಾ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 3247 ಸ್ಪರ್ಧಾಳುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ಆರ್ಚರಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಸೈಕ್ಲಿಂಗ್, ಜೂಡೋ, ಕಬಡ್ಡಿ, ಕುಸ್ತಿ, ಕಯಾಕಿಂಗ್ ಆ್ಯಂಡ್ ಕನೂಯಿಂಗ್, ಹಾಕಿ, ಲಾನ್ ಟೆನ್ನಿಸ್ ಮತ್ತು ಟೇಬಲ್ ಟೆನ್ನಿಸ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಹಾಕಿ, ಲಾನ್ ಟೆನ್ನಿಸ್ ಮತ್ತು ಟೇಬಲ್ ಟೆನ್ನಿಸ್ ಸ್ಪರ್ಧೆಗಳನ್ನು ಮಣಿಪಾಲದಲ್ಲಿ, ಕಯಾಕಿಂಗ್ ಆ್ಯಂಡ್ ಕನೂಯಿಂಗ್ ಸ್ಪರ್ಧೆಗಳನ್ನು ಬ್ರಹ್ಮಾವರದ ಸ್ವರ್ಣ ನದಿಯಲ್ಲಿ, ಆರ್ಚರಿ ಸ್ಪರ್ಧೆಯನ್ನು ಎಂಜೆಸಿ ಕ್ರೀಡಾಂಗಣದಲ್ಲಿ ಹಾಗೂ ಉಳಿದ ಸ್ಪರ್ಧೆಗಳನ್ನು ಜಿಲ್ಲಾ ಕ್ರೀಡಾಂಗಣ ಮತ್ತು ಟೆನ್ನಿಸ್ ಕ್ರೀಡಾಂಗಣಗಳಲ್ಲಿ ನಡೆಯಲಿದೆ ಎಂದರು.

ಉಡುಪಿಯಲ್ಲಿ ನಡೆಯುವ ಸ್ಪರ್ಧೆಗಳಲ್ಲಿ 1373 ಕ್ರೀಡಾಪಟುಗಳು, 260 ತಾಂತ್ರಿಕ ಸಿಬ್ಬಂದಿಗಳು ಸೇರಿದಂತೆ ಒಟ್ಟು 1633 ಜನ ಭಾಗವಹಿಸಲಿದ್ದಾರೆ. ಪ್ರತಿಯೊಂದು ಕ್ರೀಡೆಯಲ್ಲಿಯೂ ಪುರುಷ ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು.

ಜ.17ರಂದು ಸಂಜೆ 4ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.ಜ.23ರಂದು ಸಂಜೆ 5ಗಂಟೆಗೆ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.