ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ: ರಾಜ್ಯದ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಮುಂದಿನ 4 ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ ಸಂಭವಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿಯೊಂದಿಗೆ ಮಳೆಯಾಗಲಿದ್ದು, ಪ್ರತೀ ಗಂಟೆಗೆ ಗಾಳಿಯು 40-50 ಕಿ.ಮೀ. ವೇಗದಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಬಿರುಸಿನ ಗಾಳಿಯೊಂದಿಗೆ ಸಾಧಾರಣ ಪ್ರಮಾಣದ ಮಳೆ, ದಕ್ಷಿಣ ಕನ್ನಡದ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಡುಪಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ವರ್ಷಧಾರೆಯಾಗುವ ಸಾಧ್ಯತೆ ಇದೆ.

ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಶುಕ್ರವಾರ ರಾಜಧಾನಿ ಬೆಂಗಳೂರು ಸುತ್ತಲಿನ ಜಿಲ್ಲೆಗಳಲ್ಲಿ ವ್ಯಾಪಕ ವರ್ಷಧಾರೆಯಾಗಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಹಲವೆಡೆ ಗುಡುಗಿನೊಂದಿಗೆ ಬಿರುಸಿನ ಮಳೆಯಾಗಿದೆ. ಮೈಸೂರು, ಮಂಡ್ಯ, ಶಿವಮೊಗ್ಗ, ಬೀದರ್, ಕಲಬುರಗಿ, ಯಾದಗಿರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ.