ಉಡುಪಿ: ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ
ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಕುರಿತು ಕೈಗಾರಿಕೋದ್ಯಮಿ ಗಳೊಂದಿಗೆ ನಡೆದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಡಾ. ಸರೋಜಿನಿ ಮಹಷಿ ವರದಿಯಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಗಳಲ್ಲಿ ಎ.ಬಿ ಮತ್ತು ಸಿ ವರ್ಗದ ಹುದ್ದೆಗಳಿಗೆ ಅರ್ಹತೆಯನ್ನು ಆಧರಿಸಿ, ಜಿಲ್ಲೆಯ ಸ್ಥಳೀಯ ಜನರಿಗೆ ಪ್ರಥಮ ಆದ್ಯತೆಯ ಮೇಲೆ ಶೇ. 65 ಕ್ಕಿಂತ ಹೆಚ್ಚು ಹುದ್ದೆಗಳನ್ನು ಕಲ್ಪಿಸಬೇಕು ಎಂದರು.
ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಷಿ ವರದಿ ಅನ್ವಯ ಡಿ ಗ್ರೂಪ್ ಹುದ್ದೆಗಳಿಗೆ ಶೇ. 100 ರಷ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು. ಕೆಲವು ಕೈಗಾರಿಕೆಗಳಲ್ಲಿ ಹೊರರಾಜ್ಯದ ಕಾರ್ಮಿಕರುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹುದ್ದೆಗಳಿಗೆ ಸ್ಥಳೀಯರು ಸೇರಲು ಮುಂದೆ ಬರುತ್ತಿಲ್ಲ ಎಂಬ ಕಾರಣ ನೀಡುತ್ತಾರೆ. ಸಾಧ್ಯವಾದಷ್ಟು ಗ್ರಾಮ ಪಂಚಾಯತಿಗಳಲ್ಲಿ ಹುದ್ದೆ ಖಾಲಿ ಇರುವ ಬಗ್ಗೆ ಮಾಹಿತಿ ಪ್ರಚಾರಪಡಿಸಿ, ಸ್ಥಳೀಯರಿಗೆ ಉದ್ಯೋಗ ನೀಡಲು ಮುಂದಾಗಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಯುವ ಜನರು ಉದ್ಯೋಗವನ್ನು ಅರಸಿ ಹೊರ ಹೋಗುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗಿ ಭವಿಷ್ಯದಲ್ಲಿ ಮನೆಯಲ್ಲಿರುವ ವಯಸ್ಕರ ಯೋಗಕ್ಷೇಮ ನೋಡಲು ಕೊರತೆಯಾಗುವ ಸಾಧ್ಯತೆಗಳಿರುತ್ತವೆ. ಡಾ. ಸರೋಜಿನಿ ಮಹಷಿ ವರದಿ ಪಾಲನೆ ಮಾಡುವುದರೊಂದಿಗೆ ಕನ್ನಡ ಓದಲು ಹಾಗೂ ಬರೆಯಲು ಕಲಿತಿರುವ ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕು ತಪ್ಪಿದ್ದಲ್ಲಿ, ಇವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೈಗಾರಿಕೋದ್ಯಮಗಳು ತಮ್ಮ ಕೈಗಾರಿಕೆಗಳ ಮುಂಭಾಗದಲ್ಲಿ ಅಳವಡಿಸಿರುವ ನಾಮ ಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಹಾಗೂ ಇತರೆ ಭಾಷೆಯಲ್ಲಿ ಶೇ. 40 ರಷ್ಟು ಅಳತೆಯಲ್ಲಿ ಪ್ರದರ್ಶಿಸುವುದು ಕಡ್ಡಾಯವಾಗಿರುತ್ತದೆ. ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದ ಅವರು, ಘಟಕದ ಉತ್ಪನ್ನಗಳ ಪ್ಯಾಕೇಟ್ ಮೇಲೆ ಘಟಕದ ಹೆಸರು, ಮತ್ತಿತರ ಮಾಹಿತಿಯನ್ನು ಕನ್ನಡ ಭಾಷೆಯಲ್ಲಿ ನಮೂಸಿದತಕ್ಕದ್ದು ಎಂದರು.
ಜಿಲ್ಲೆಯ ಕೈಗಾರಿಕಾ ಘಟಕಗಳಲ್ಲಿ ಬಾಂಗ್ಲಾದೇಶದ ಪ್ರಜೆಗಳು ಕಾರ್ಯನಿರ್ವಹಿಸುತ್ತಿದ್ದಲ್ಲಿ ಸಮೀಪದ ಪೊಲೀಸ್ ಠಾಣೆಗೆ
ಮಾಹಿತಿಯನ್ನು ನೀಡಬೇಕು ಎಂದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಹರೀಶ್
ಕುಂದರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.












