ಜಿಲ್ಲಾ ಮಟ್ಟದ ಮ್ಯಾರಥಾನ್‌ಗೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ
ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಸಾಯಿರಾಧಾ ಗ್ರೂಪ್, ರಾಜ್ ಫಿಶ್‌ಮಿಲ್ ಮತ್ತು ಆಯಿಲ್ ಕಂಪನಿ ಮಲ್ಪೆ, ಆದರ್ಶ ಆಸ್ಪತ್ರೆ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಮತ್ತು ರೋಟರಿ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಹೆಚ್‌ಐವಿ/ ಏಡ್ಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ 5 ಕಿ.ಮೀ ಮ್ಯಾರಥಾನ್ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯು ಮಹಾಮಾರಿ ಏಡ್ಸ್ಗೆ ತುತ್ತಾಗುತ್ತಿದ್ದು, ರೋಗವು ಒಂದು ಬಾರಿ ತಗುಲಿದರೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಏಡ್ಸ್ ರೋಗದ ಕುರಿತು ಜಾಗೃತಿ ವಹಿಸಿ, ಸೋಂಕು ತಗುಲದಂತೆ ಎಚ್ಚರ ಹೊಂದುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಏಡ್ಸ್ನ ಕುರಿತು ಜನರಿಗೆ ಮುಕ್ತ ಸಂದೇಶವನ್ನು ನೀಡುವ ಉದ್ದೇಶದಿಂದ ಮ್ಯಾರಥಾನ್ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದರು.

ಉಡುಪಿ ಜಿಲ್ಲೆಯನ್ನು ಹೆಚ್.ಐ.ವಿ /ಏಡ್ಸ್ ಮುಕ್ತ ಜಿಲ್ಲೆಯನ್ನಾಗಿಸೋಣ ಎಂಬ ಸಂದೇಶವು ಈ ಮ್ಯಾರಾಥಾನ್ ಮೂಲಕ ಸಮುದಾಯಕ್ಕೆ ರವಾನೆಯಾಗಲಿ ಎಂದರು.

5 ಕಿ.ಮೀ ಮ್ಯಾರಥಾನ್ ಪುರುಷರ ವಿಭಾಗದಲ್ಲಿ ಉಡುಪಿ ಎಂ.ಜಿ.ಎಂ ಕಾಲೇಜಿನ ಪ್ರಯಾಗ ಶೆಟ್ಟಿ ಪ್ರಥಮ ಹಾಗೂ ಮಹಿಳೆಯರ ವಿಭಾಗದಲ್ಲಿ ನಿಟ್ಟೆ ಸ್ಪೋರ್ಟ್ಸ್ ಕ್ಲಬ್ ಕುಮಾರಿ ನಂದಿನಿ ಪ್ರಥಮ ಬಹುಮಾನ ಪಡೆಯುವುದರೊಂದಿಗೆ ರಾಜ್ಯಮಟ್ಟದ ಮ್ಯಾರಥಾನ್ ಭಾಗವಹಿಸುವ ಅವಕಾಶ ಲಭಿಸಿತು.

ಉಳಿದಂತೆ ಪುರುಷರ ವಿಭಾಗದಲ್ಲಿ ದ್ವಿತೀಯ ನಾಗರಾಜ ಡೈಯಸ್, ತೃತೀಯ ವಿವೇಕಾನಂದ, ಆನಂದ ತೀರ್ಥ ಕಾಲೇಜು ಇವರು ಕ್ರಮವಾಗಿ ಬಹುಮಾನ ವಿಜೇತರಾದರು ಮಹಿಳೆಯರ ವಿಭಾಗದಲ್ಲಿ ಪ್ರತೀಕ್ಷಾ ,ಮತ್ತು ಸಾಕ್ಷಿ ನಿಟ್ಟೆ ಸ್ಪೋರ್ಟ್ಸ್ ಕ್ಲಬ್ ಇವರು ಕ್ರಮವಾಗಿ ಬಹುಮಾನ ವಿಜೇತರಾದರು ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪದಕ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ, ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ ಶೆಟ್ಟಿ, ಅಮೆಚೂರ್ ಅಥ್ಲೆಟಿಕ್
ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಆದರ್ಶ ಸಮೂಹ ಸಂಸ್ಥೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿಮಲಾ ಚಂದ್ರಶೇಖರ್, ರೋಟರಿ ಕ್ಲಬ್ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ದಿನೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅನುಷ್ಠಾನ ಅಧಿಕಾರಿ ಡಾ. ಚಿದಾನಂದ ಸಂಜು ಸ್ವಾಗತಿಸಿ, ಮಂಜುನಾಥ ನಿರೂಪಿಸಿ ವಂದಸಿದರು.ಕಾರ್ಯಕ್ರಮದಲ್ಲಿ 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.