ಉಡುಪಿ: ಸಾಸ್ತಾನ ಟೋಲ್ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡದಿರುವ ಕೆಕೆಆರ್ ಟೋಲ್ ಕಂಪೆನಿ ವಿರುದ್ಧ ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ನಾಗರಿಕರು, ಸಂಘ-ಸಂಸ್ಥೆಗಳು, ಸ್ಥಳೀಯ ಗ್ರಾಪಂಗಳು, ಪ.ಪಂ. ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಇದೇ ಡಿ.31ರಂದು ಕೋಟ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಬೆಳಿಗ್ಗೆ 9:30ರಿಂದ ಟೋಲ್ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಅಂದ್ರಾದೆ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಾಸ್ತಾನ ಟೋಲ್ನಲ್ಲಿ ಹಿಂದೆ ಸಂಸದರು, ಶಾಸಕರು ಹಾಗೂ ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋಟ ಜಿಪಂ ವ್ಯಾಪ್ತಿಯ ಎಲ್ಲಾ ವಾಹನಗಳಿಗೂ ಟೋಲ್ ವಿನಾಯಿತಿ ನೀಡಲಾಗಿತ್ತು.
ಕಳೆದ ಹಲವಾರು ವರ್ಷಗಳಿಂದ ಸ್ಥಳೀಯ ಎಲ್ಲಾ ವಾಹನಗಳು ಉಚಿತವಾಗಿ ಪ್ರಯಾಣಿಸುತ್ತಿದ್ದವು. ಆದರೆ ಇತ್ತೀಚೆಗೆ ಟೋಲ್ ವ್ಯವಸ್ಥೆ ಮತ್ತು ರಸ್ತೆ ನಿರ್ವಹಣೆ ಗುತ್ತಿಗೆದಾರ ನವಯುಗ ಕಂಪನಿಯು ಟೋಲ್ ಗುತ್ತಿಗೆ ಮತ್ತು ನಿರ್ವಹಣೆಯ ಹೊಣೆಯನ್ನು ಕೆಕೆಆರ್ ಕಂಪನಿಗೆ ಮಾರಾಟ ಮಾಡಿದ್ದು, ಇದೀಗ ಕೆಕೆಆರ್ ಸಂಸ್ಥೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಸ್ಥಳೀಯ ವಾಣಿಜ್ಯ ವಾಹನಗಳಿಂದ ಡಿ.30ರಿಂದ ಶುಲ್ಕ ಪಡೆಯಲು ಮುಂದಾಗಿದೆ ಎಂದರು.
ಈ ಹೋರಾಟಕ್ಕೆ ಸ್ಥಳೀಯ ಜಿಪಂ ಕೋಟ ಕ್ಷೇತ್ರ ವ್ಯಾಪ್ತಿಯ ಆರು ಗ್ರಾಪಂಗಳಾದ ಪಾಂಡೇಶ್ವರ, ಐರೋಡಿ, ಕೋಟ, ಕೋಟತಟ್ಟು, ವಡ್ಡರ್ಸೆ, ಕೋಡಿ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ಗಳು ಈಗಾಗಲೇ ಬೆಂಬಲ ಸೂಚಿಸಿದೆ. ಟೋಲ್ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಾಣದ ಬಗ್ಗೆ ಆಗ್ರಹಿಸಿ ಎಲ್ಲಾ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ನಲ್ಲಿ ನಿರ್ಣಯಕೈಗೊಳ್ಳಲಾಗಿದೆ ಎಂದು ಆಲ್ವಿನ್ ಅಂದ್ರಾದೆ ತಿಳಿಸಿದರು.
ಈ ಸಮಸ್ಯೆಗಳ ಕುರಿತು ಸಂಸದರು ಹಾಗೂ ಜಿಲ್ಲಾಧಿಕಾರಿಗಳು ಡಿ.30ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಎಲ್ಲ ಸಮಸ್ಯೆಗಳಿಗೂ ತಾರ್ಕಿಕ ಅಂತ್ಯ ದೊರೆಯಬೇಕು. ಇಲ್ಲದಿದ್ದರೆ ಧರಣಿಯನ್ನು ತೀವ್ರಗೊಳಿಸಿ ಮುಂದುವರೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠಲ್ ಪೂಜಾರಿ, ಮಾಜಿ ಅಧ್ಯಕ್ಷ ಪ್ರತಾಪ್ ಶೆಟ್ಟಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಪಾಂಡೇಶ್ವರ ಗ್ರಾಪಂ ಅಧ್ಯಕ್ಷೆ ಸುಶೀಲ ಪೂಜಾರಿ, ಐರೋಡಿ ಗ್ರಾಪಂ ಸದಸ್ಯ ನಟರಾಜ್ ಗಾಣಿಗ, ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಭರತ್ ಶೆಟ್ಟಿ, ಕೋಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಕುಂದರ್, ವಡ್ಡರ್ಸೆ ಗ್ರಾಪಂ ಸದಸ್ಯ ಹರೀಶ್ ಶೆಟ್ಟಿ, ಲಾರಿ ಮಾಲಕರ ಸಂಘದ ಗೌರವಾಧ್ಯಕ್ಷ ಭೋಜ ಪೂಜಾರಿ, ಹೆದ್ದಾರಿ ಜಾಗ್ರತಿ ಸಮಿತಿ ಸದಸ್ಯರಾದ ನಾಗರಾಜ ಗಾಣಿಗ, ಪ್ರಶಾಂತ್ ಶೆಟ್ಟಿ ಸಂದೀಪ್ ಕುಂದರ್, ಮಹಾಬಲ ಪೂಜಾರಿ ಉಪಸ್ಥಿತರಿದ್ದರು.












