ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ನಗರ ವಿಖ್ಯಾತಿ ಪಡೆದಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ನಾಡಪ್ರಭು ಕೆಂಪೇಗೌಡರು ದೂರದೃಷ್ಠಿ ಇಟ್ಟುಕೊಂಡು ನಿರ್ಮಿಸಿದ ಬೆಂಗಳೂರು ನಗರ ಕೋಟ್ಯಾಂತರ ಜನರ ಬದುಕು ಕಟ್ಟಿಕೊಳ್ಳಲು ಆಶ್ರಯ ಆಗುವುದರ ಜೊತೆಗೆ ವಿಶ್ವವಿಖ್ಯಾತಿ ನಗರವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 15-16 ನೇ ಶತಮಾನದ ಅವಧಿಯಲ್ಲಿ ನಾಡಪ್ರಭು ಕೆಂಪೇಗೌಡರು ಸ್ವತಂತ್ರವಾಗಿ ಯೋಚಿಸುವಂತ ವ್ಯಕ್ತಿತ್ವ ಹೊಂದಿದೆ, ಮುಂದಿನ 4 ರಿಂದ 5 ಶತಕದಲ್ಲಿ ಬೆಂಗಳೂರು ನಗರವನ್ನು ಅಭಿವೃದ್ಧಿ ಪಡಿಸುವ ದೂರ ದೃಷ್ಠಿಯನ್ನು ಇಟ್ಟುಕೊಂಡು ನಗರವನ್ನು ಅತ್ಯುತ್ತಮವಾಗಿ ನಿರ್ಮಾಣ ಮಾಡಿದ ಮಹಾನ್ ವ್ಯಕ್ತಿತ್ವ ಅವರದ್ದಾಗಿದೆ ಎಂದರು.

ಅವರು ನಗರ ನಿರ್ಮಾಣ ಮಾಡುವಾಗಲೇ ಸಮಾಜದಲ್ಲಿನ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ವೃತ್ತಿ ಆಧಾರಿತವಾಗಿ ಜನರ ಆರ್ಥಿಕ ಅಭಿವೃದ್ಧಿಗೆ ಅನೇಕ ಪೇಟೆಗಳನ್ನು ನಿರ್ಮಿಸಿದರು. ಈಗಾಲೂ ಸಹ ಬೆಂಗಳೂರಿನಲ್ಲಿ ಚಿಕ್ಕಪೇಟೆ, ಕಾಟನ್ ಪೇಟೆ, ಕುಂಬಾರ ಪೇಟೆ, ಅಕ್ಕಿಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳು ಇರುವುದನ್ನು ಕಾಣಬಹುದಾಗಿದೆ ಎಂದರು. ನಾಗರಿಕ ಸಮಾಜಕ್ಕೆ ಅವಶ್ಯವಿರುವ ನೀರಿನ ಸವಲತ್ತುಗಳನ್ನು ಕಲ್ಪಿಸಲು ನಗರದಲ್ಲಿ ಅನೇಕ ಕೆರೆ ಕಟ್ಟೆ ನಿರ್ಮಾಣಗಳನ್ನು ಮಾಡುವುದರ ಜೊತೆಗೆ ನೀರು ಒಂದು ಕೆರೆ ತುಂಬಿ ಮತ್ತೊಂದು ಕೆರೆಗೆ ಸಾಗಲು ಕಾಲುವೆ ನಿರ್ಮಾಣ ಯೋಜನೆಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿದ್ದರು. ಇಂದಿಗೂ ಬೆಂಗಳೂರಿನಲ್ಲಿ ಕೆಂಪಾಂಬುದಿ ಕೆರೆ, ಹಲಸೂರು ಕೆರೆ, ಕಾರಂಜಿ ಕೆರೆ ಸೇರಿದಂತೆ ಅನೇಕ ಕೆರೆಗಳನ್ನು ನಿರ್ಮಿಸಿರುವುದು ಜಲ ಮೂಲಗಳಿಗೆ ಕೊಟ್ಟ ಆದ್ಯತೆಯನ್ನು ನಾವು ನೋಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ದೇಶದಲ್ಲಿ ಬಹಳಷ್ಟು ನಗರಗಳು ನದಿ ತೀರದಲ್ಲಿ ಸ್ಥಾಪನೆಗೊಂಡಿದ್ದು, ಬೆಂಗಳೂರು ನಗರಕ್ಕೆ ಯಾವುದೇ ನದಿ ತೀರವಿಲ್ಲ. ಬದಲಿಗೆ ಕೆರೆ-ಕಟ್ಟೆಗಳನ್ನು ನಿರ್ಮಾಣ ಮಾಡಿ, ಕುಡಿಯುವ ನೀರು, ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಜನರಿಗೆ ಕಲ್ಪಿಸಿಕೊಟ್ಟಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಸಾವಿರಾರು ಜನರಿಗೆ ಬದುಕು ಕಟ್ಟಿಕೊಟ್ಟ ಬೆಂಗಳೂರು ಎಂಬ ಸುಂದರ ನಗರವನ್ನು ನಿರ್ಮಿಸಿದ ಹೆಗ್ಗಳಿಕೆಗೆ ಕೆಂಪೇಗೌಡರದ್ದು. ಸಮಾಜದ ಏಳಿಗೆಗೆ ತಮ್ಮದೇ ಆದ ಕೊಡುಗೆ ನೀಡಿದ ಕೆಂಪೇಗೌಡರ ದೂರದೃಷ್ಠಿಯಿಂದ ಇಂದು ಇಡೀ ವಿಶ್ವವೇ ಬೆಂಗಳೂರಿನತ್ತ ತಿರುಗಿ ನೋಡಿವಂತಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಕಾಶ್ ಶೆಟ್ಟಿ ಉಪನ್ಯಾಸ ನೀಡಿ ಮಾತನಾಡಿ, ಸಮಾಜದಲ್ಲಿ ಎರಡು ತರಹದ ವ್ಯಕ್ತಿತ್ವವನ್ನು ಹೊಂದಿರುವವರನ್ನು ಕಾಣಬಹುದಾಗಿದೆ. ಒಬ್ಬರು ಸಮಾಜದಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡು ಶ್ರೀಮಂತರಾಗುತ್ತಾರೆ. ಇನ್ನೊಬ್ಬರು ಸಮಾಜದಲ್ಲಿರುವ ಜನರ ಬದುಕನ್ನು ಕಟ್ಟಿಕೊಡಲು ಮುಂದಾಗುತ್ತಾರೆ. ನಾಡಪ್ರಭು ಕೆಂಪೇಗೌಡರು ಸಮಾಜದ ಎಲ್ಲಾ ಜನರ ಅಭಿವೃದ್ಧಿಗೆ ಮುಂದಾಗಿ ಇಂದಿಗೂ ಪ್ರತಿಯೊಬ್ಬರಿಗೂ ಅವಿಸ್ಮರಣೀಯ
ವ್ಯಕ್ತಿಯಾಗಿದ್ದಾರೆ ಎಂದರು. ಎಲ್ಲರನ್ನು ಸಮಾನ ಮನೋಭಾವದಿಂದ ಕಾಣುತ್ತಿದ್ದ ಅವರು ಯಾವುದೇ ಜಾತಿ, ಮತ, ಧರ್ಮ, ಬೇಧವಿಲ್ಲದೆ ಪ್ರತಿಯೊಬ್ಬರ ಏಳಿಗೆಗಾಗಿ ಶ್ರಮಿಸಿದ್ದರು. ಬೆಂಗಳೂರು ನಿರ್ಮಾಣ ಕೆಂಪೇಗೌಡರ ಅತಿದೊಡ್ಡ ಕನಸಾಗಿತ್ತು. ನಗರಕ್ಕೆ ಬೇಕಾದ ಅಗತ್ಯತೆಗಳ ಬಗ್ಗೆ ಸ್ಪಷ್ಟತೆ ಹೊಂದಿದ್ದ ಅವರು, ನಗರಕ್ಕೆ ಬೇಕಾದ ಪ್ರತಿಯೊಂದು ಮೂಲಭೂತ ಸೌಕರ್ಯಗಳನ್ನು ಒದಗಿಸಿದರೊಂದಿಗೆ ಬೆಂಗಳೂರಿನ ಇಂದಿನ ಅಭಿವೃದ್ಧಿಗೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ ಎಂದರು. ಕೇವಲ ಒಂದೇ ಜಾತಿಗೆ ಸೀಮಿತವಾಗಿರದೇ ಸರ್ವಧರ್ಮಿಯರನ್ನೂ ಸಮಾನವಾಗಿ ಕಾಣುತ್ತಿದ್ದ ಕೆಂಪೇಗೌಡರ ಆದರ್ಶಗಳು ನಮ್ಮೆಲ್ಲರಿಗೂ ಹಾಗೂ ಮುಂದಿನ ಪೀಳಿಗೆಗೂ ಮಾರ್ಗದರ್ಶನವಾಗಲಿ ಎಂದರು.

ಈ ಸಂದರ್ಭದಲ್ಲಿ ಕೆಂಪೇಗೌಡರ ಜಯಂತಿ ಅಂಗವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ಗೌಡ ಎ, ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ, ವಕ್ಕಲಿಗ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಕರುಗಳು, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ದಯಾನಂದ ನಿರೂಪಿಸಿ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸುಮಾ ಎಸ್ ವಂದಿಸಿದರು.