ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನ ಕೋಟೆಕಾರ್ ಸಹಕಾರಿ ಬ್ಯಾಂಕ್’ಗೆ ಶುಕ್ರವಾರ (ಜ.17) ಮಧ್ಯಾಹ್ನ ಹಾಡಹಗಲೇ ಬ್ಯಾಂಕ್ ಗೆ ನುಗ್ಗಿದ ಖದೀಮರ ಗುಂಪು ಹತ್ತು ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.
ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು.












