ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಮೂಡಿಗೆರೆ: ಸರ್ಕಾರದಿಂದ ಜಾರಿಗೆ ತಂದಿರುವ ಆರೋಗ್ಯ ವಿಮಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಮಾನ್ಯ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದನ್ನು ಸರಳೀಕರಣಗೊಳಿಸುವ ಕೆಲಸವಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹರಿಹರದ ಹಫ್ಳಿಯಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಅವರು ಮಾತನಾಡಿದರು.

ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸರ್ಕಾರದ ನೆರವು ಪಡೆಯಬೇಕಾದಲ್ಲಿ, ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಪತ್ರ ಪಡೆದುಕೊಂಡು, ಖಾಸಗಿ ಆಸ್ಪತ್ರೆಗೆ ತೆರಳಬೇಕು. ಅಲ್ಲಿ ಹೆಚ್ಚಿನ ಸಂದರ್ಭದಲ್ಲಿ ಬೆಡ್ ದೊರೆಯುವುದೇ ಕಷ್ಟ. ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಲಕ್ಷಾಂತರ ರೂ. ಸಾಲ ಮಾಡಬೇಕಾದ ಅನಿವಾರ್ಯತೆಗಳು ನಿರ್ಮಾಣವಾಗುತ್ತದೆ. ಈ ಎಲ್ಲಾ ತಾಪತ್ರಯಗಳ ನಿವಾರಣೆಗೆ ಸರ್ಕಾರದಿಂದಲೇ ಸರಳಿಕೃತ ಆರೋಗ್ಯ ಕಾರ್ಡ್ ವಿತರಣೆಯಾಗಬೇಕು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ‌ ನಿರ್ಮಾಣವಾಗಬೇಕು, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ನಮ್ಮ ಮೂಲಭೂತ ಆದ್ಯತೆಯಾಗುವ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ಜಾರಿಗೆ ಬರಬೇಕು ಎಂದರು.

ಕರ್ನಾಟಕದಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿದ ಗ್ಯಾರೆಂಟಿ ಭರವಸೆಗಳನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ರೈತರು, ವಿದ್ಯಾರ್ಥಿಗಳು, ಯುವಜನರು. ಮಹಿಳೆಯರು ಸೇರಿದಂತೆ ಸಮಾಜದ ಎಲ್ಲ ವರ್ಗದವರಿಗೂ ಅನೂಕೂಲವಾಗುವ ಯೋಜನೆಗಳನ್ನು ಜಾರಿಗೆ ತರುವ ಗ್ಯಾರೆಂಟಿಯನ್ನು ಘೋಷಿಸಲಾಗಿದ್ದು, ಇದನ್ನು ಈಡೇರಿಸುವ ಬದ್ಧತೆ ಇರಿಸಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕಿ ನಯನಾ ಮೋಟಮ್ಮ , ಮಾಜಿ ಶಾಸಕ ಕುಮಾರಸ್ವಾಮಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.