ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ ನಡೆದಿದೆ.
ಮೃತ ಬಾಲಕನನ್ನು ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಇವರು ಮಾಧವ ಅಮೀನ್ ಅವರ ಪುತ್ರರಾಗಿದ್ದು, ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಬುಧವಾರ ಸಂಜೆ ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಲಿಖಿತ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಲಿಖಿತ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಶಾಲೆಯ ಶಿಕ್ಷಕ-ವಿದ್ಯಾರ್ಥಿಗಳಲ್ಲಿ ತೀವ್ರ ದುಃಖ ಮನೆ ಮಾಡಿದೆ. ವಿದ್ಯಾರ್ಥಿ ಕುಸಿದು ಬಿದ್ದ ನಿಖರ ಕಾರಣ ವೈದ್ಯಕೀಯ ಪರೀಕ್ಷೆಯ ವರದಿ ಬಳಿಕವೇ ಸ್ಪಷ್ಟವಾಗುವ ಸಾಧ್ಯತೆಯಿದೆ.















