ಜಿಲ್ಲೆಯಲ್ಲಿ 2,73,548 ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆ ವಿತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ 

ಉಡುಪಿ: ಮಾರ್ಚ್ 13 ರಂದು ರಾಷ್ಟಿಯ ಜಂತುಹುಳ ನಿವಾರಣಾ ದಿನದ ಅಂಗವಾಗಿ ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,73,548 ಮಕ್ಕಳಿಗೆ Albendazole ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಜಂತುಹುಳುಗಳು 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ, ಆ ಮಕ್ಕಳಲ್ಲಿ ಹೊಟ್ಟೆನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತು ಇಂತಹ ಲಕ್ಷಣಗಳು ಕಂಡುಬರುತ್ತವೆ. ಇದರಿಂದಾಗಿ ಅವರಲ್ಲಿ ರಕ್ತಹೀನತೆ, ಪೌಷ್ಠಿಕಾಹಾರದ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ತೊಂದರೆ ಕಾಣಿಸಿಕೊಳ್ಳಬಹುದು. Albendazole ಮಾತ್ರೆ ನೀಡುವುದರಿಂದ ಈ ಜಂತುಹುಳಗಳು ನಾಶವಾಗುತ್ತವೆ.

ಈ ಕಾರ್ಯಕ್ರಮದಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, Residential School, ITI, Nursing College, 1st year degree College students, 1st Year Engineering College ವಿದ್ಯಾರ್ಥಿಗಳಿಗೆ ಆಯಾಯ ಶಾಲೆ/ ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತಿದೆ. ಅಂಗನವಾಡಿ ಮಕ್ಕಳಿಗೆ ಮತ್ತು ಶಾಲೆಯಿಂದ ಹೊರಗುಳಿದ 19 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ.

ನೈರ್ಮಲ್ಯತೆಯ ಕೊರತೆ ಹಾಗೂ ವೈಯುಕ್ತಿಕ ಶುಚಿತ್ವದ ಕೊರತೆಯಿಂದ ಮತ್ತು ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಶಿಸುವುದರಿಂದ ಜಂತುಹುಳು ಭಾದೆ ಹರಡಲಿದ್ದು, ಇದರಿಂದ ತಪ್ಪಿಸಿಕೊಳ್ಳಲು, ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಿ ಶುಚಿಯಾಗಿಡುವುದು. ಊಟ/ತಿಂಡಿ ಮಾಡುವ ಮೊದಲು ಹಾಗೂ ಶೌಚಾಲಯವನ್ನು ಬಳಸಿದ ನಂತರ ಕೈಗಳನ್ನು ಸಾಬೂನಿನಿಂದ ತೊಳೆಯುವುದು. ಶುದ್ಧೀಕರಿಸಿದ ನೀರನ್ನೇ ಕುಡಿಯುವುದು. ಹಣ್ಣು, ಹಂಪಲು, ತರಕಾರಿಗಳನ್ನು ಉಪಯೋಗಿಸುವ ಮುನ್ನ ಶುಧ್ಧ ನೀರಿನಿಂದ ತೊಳೆಯುವುದು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಮುಖ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.