40ನೇ ರಾಜ್ಯಮಟ್ಟದ ನಾಟಕೋತ್ಸವ ಸ್ಪರ್ಧೆಯ ಬಹುಮಾನ ವಿತರಣೆ

ಉಡುಪಿ: ಭಾಷೆ ಎನ್ನುವುದು ಭಾವನೆ ವ್ಯಕ್ತಪಡಿಸುವ ಪದಗಳು. ಆದರೆ ಕೇವಲ ಪದಗಳಿಂದ ಭಾವನೆ ವ್ಯಕ್ತಪಡಿಸಲು ಸಾಧ್ಯವಿಲ್ಲ. ಹಾಗಾಗಿ ಭಾಷೆಯ ಜತೆ ಅಭಿನಯವನ್ನು ಸೇರಿಸಿಕೊಳ್ಳಲಾಯಿತು. ಇದು ಕ್ರಮೇಣ ರೂಪಾಂತರಗೊಂಡು ನಾಟಕ ಹುಟ್ಟಿಕೊಂಡಿತು ಎಂದು ಉಡುಪಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ. ವಿಜಯ ಹೇಳಿದರು.
ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಭಾನುವಾರ ನಡೆದ 40ನೇ ರಾಜ್ಯಮಟ್ಟದ ನಾಟಕೋತ್ಸವ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾಂಜಲಿ ಸ್ಮರಣಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ರಂಗಭೂಮಿ ಕಲಾವಿದ ಶ್ರೀನಿವಾಸ ಶೆಟ್ಟಿಗಾರ್‌, ಸಂಸ್ಥೆಯ ಉಪಾಧ್ಯಕ್ಷ ನಂದಕುಮಾರ್‌, ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 40ನೇ ರಾಜ್ಯಮಟ್ಟದ ನಾಟಕೋತ್ಸವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸಮಷ್ಟಿ ಬೆಂಗಳೂರು ತಂಡಕ್ಕೆ ಬಹುಮಾನ ವಿತರಿಸಲಾಯಿತು.