ತುರ್ತು ಪರಿಸ್ಥಿತಿ ಘೋಷಣೆಗೆ ಇಂದು 50 ವರ್ಷ: ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ; ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಉಲ್ಲಂಘಿಸಿದ್ದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ ಸಾಂವಿಧಾನಿಕ ಆದರ್ಶಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಸಂಕಲ್ಪವನ್ನು ಒತ್ತಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ‘ಸಂವಿಧಾನ ಹತ್ಯೆ ದಿನ’ ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ‘ತುರ್ತು ಪರಿಸ್ಥಿತಿ ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ’ ಎಂದು ಹೇಳಿದ್ದಾರೆ.’ಸಂವಿಧಾನದಲ್ಲಿ ಪ್ರತಿಪಾದಿಸಿದ ಮೌಲ್ಯಗಳನ್ನು ಕಡೆಗಣಿಸಲಾಯಿತು. ಮೂಲಭೂತ ಹಕ್ಕುಗಳನ್ನು ಅಮಾನತ್ತಿನಲ್ಲಿಡಲಾಯಿತು. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರನ್ನು ಜೈಲಿಗೆ ಕಳುಹಿಸಲಾಯಿತು’ ಎಂದು ಅವರು ಹೇಳಿದ್ದಾರೆ.

ಅಂದಿನ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಬಂಧನದಲ್ಲಿರಿಸಿತ್ತು. ಸಂಸತ್ತಿನ ಧ್ವನಿಯನ್ನು ಕ್ಷೀಣಗೊಳಿಸಲಾಯಿತು. ನ್ಯಾಯಾಲಯಗಳನ್ನು ನಿಯಂತ್ರಿಸಲು ಯತ್ನಿಸಲಾಯಿತು. ಹಿಂದುಳಿದ, ಬಡವರು ಹಾಗೂ ದೀನದಲಿತರನ್ನು ಗುರಿಯಾಗಿಸಲಾಯಿತು. ಇವೆಲ್ಲವೂ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಸರ್ಕಾರದ ಕುತಂತ್ರಗಳಿಗೆ ಉದಾಹರಣೆಯಾಗಿದೆ’ ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದ ಪ್ರತಿಯೊಬ್ಬರಿಗೂ ಸೆಲ್ಯೂಟ್:
ತುರ್ತು ಪರಿಸ್ಥಿತಿಯ ಸಮಯದಲ್ಲಿ ಹೋರಾಡಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಸೆಲ್ಯೂಟ್ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಲು ಮತ್ತು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಮುಡಿಪಾಗಿಟ್ಟ ಆದರ್ಶಗಳನ್ನು ಸಂರಕ್ಷಣೆಗಾಗಿ ದೇಶದಾದ್ಯಂತ ಜನರು ಒಂದೇ ಗುರಿಯೊಂದಿಗೆ ಒಗ್ಗಟ್ಟಾಗಿ ಕೆಲಸ ಮಾಡಿದ್ದರು’ ಎಂದು ಅವರು ಉಲ್ಲೇಖಿಸಿದ್ದಾರೆ.’ಈ ಸಾಮಾಜಿಕ ಹೋರಾಟದಿಂದಾಗಿ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಹಾಗೂ ಹೊಸ ಚುನಾವಣೆ ಘೋಷಿಸಲು ಕಾರಣವಾಯಿತು. ಆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು ಎದುರಾಯಿತು’ ಎಂದಿದ್ದಾರೆ.

ಸಂವಿಧಾನ ಹತ್ಯೆ ದಿನ:
ನಮ್ಮ ಸಂವಿಧಾನದ ಮೌಲ್ಯಗಳನ್ನು ಬಲಪಡಿಸುವ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಬದ್ಧತೆಯ್ನು ಪುನರುಚ್ಚರಿಸುತ್ತೇನೆ. ನಾವು ಪ್ರಗತಿಯ ಹೊಸ ಎತ್ತರಕ್ಕೆ ತಲುಪೋಣ ಮತ್ತು ಬಡವರು, ದೀನದಲಿತರ ಕನಸುಗಳನ್ನು ನನಸುಗೊಳಿಸೋಣ’ ಎಂದು ಹೇಳಿದ್ದಾರೆ. ತುರ್ತು ಪರಿಸ್ಥಿತಿ ಹೇರಿಕೆಯ ದಿನವನ್ನು ‘ಸಂವಿಧಾನ ಹತ್ಯೆ ದಿನ’ವಾಗಿ ಆಚರಿಸಲಾಗುವುದು ಎಂದು ಕೇಂದ್ರ ಸರ್ಕಾರ ಕಳೆದ ವರ್ಷ ಘೋಷಿಸಿತ್ತು.