ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಟಪಾಡಿ ಗ್ರಾಪಂ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಬಿಜೆಪಿ ನಾಯಕಿ ಗೀತಾಂಜಲಿ ಸುವರ್ಣ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರವು ಜನವಿರೋಧಿ ನೀತಿಗಳನ್ನು ಜಾರಿಗೆ ತಂದು ಬಡವರನ್ನು ತುಳಿಯುವ ಕೆಲಸ ಮಾಡುತ್ತಿದೆ. ರಾಜ್ಯ ಸರಕಾರ ಜಾರಿಗೆ ತಂದ ಜಟಿಲ ನಿಯಮಗಳು ಜನಸಾಮಾನ್ಯರಿಗೆ ಮಾರಕವಾಗಿವೆ.
ಬಡವರಿಗೆ ಮನೆಕಟ್ಟು 9/11 ಸಿಗುತ್ತಿಲ್ಲ. ಅಕ್ರಮ ಸಕ್ರಮ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಆಶ್ರಯ ಯೋಜನೆಯಡಿ ಮನೆ ಮಂಜೂರಾಗುತ್ತಿಲ್ಲ. ಮಳೆಗಾಲದಲ್ಲಿ ಮನೆಗಳಿಗೆ ಹಾನಿಯಾದ ಸಂದರ್ಭದಲ್ಲಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಕಡಿತಗೊಳಿಸಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ಬಡಜನರು ಪಡೆಯುತ್ತಿದ್ದ ಪಿಂಚಣಿಗೂ ಸರಕಾರ ಕೈ ಹಾಕಿದೆ. ರಾಜ್ಯ ಸರಕಾರ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಹಾಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವೀಣಾ ಶೆಟ್ಟಿ, ಸಂಧ್ಯಾ ಹಾಗೂ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಾಜಿ ತಾಲೂಕು ಪಂಚಾಯತ್ ಸದಸ್ಯರು ಇದ್ದರು.












