ಉಡುಪಿ: ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ಕೊಡವೂರು ತಿಳಿಸಿದರು.
ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಛೇರಿ ಸಭಾಂಗಣದಲ್ಲಿನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರಕಾರ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂಬ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ,ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಇವು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂತಲುಪಿಸುವ ಕಾರ್ಯವನ್ನು ಮಾಡಬೇಕು ಎಂದು ಕರೆ ನೀಡಿದರು.
ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರಿಗೆ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದು, 2023 ರ ಜೂನ್ನಿಂದ ಈವರೆಗೆಜಿಲ್ಲೆಯಲ್ಲಿ 2.57 ಕೋಟಿ ಗೂ ಹೆಚ್ಚು ಮಹಿಳೆಯರು ಸಂಚರಿಸಿದ್ದು, 90.10 ಕೋಟಿ ರೂ. ಭರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 2023 ರ ಆಗಸ್ಟ್ ನಿಂದ ಈವರೆಗೆ 2.25 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಪ್ರತೀ ತಿಂಗಳು 2000 ರೂ, ನಂತೆ ಈವರೆಗೆ 870.83 ಕೋಟಿ ರೂ. ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2023 ರ ಆಗಸ್ಟ್ ನಿಂದ ಈವರೆಗೆ 2.81 ಲಕ್ಷ ಗೃಹಬಳಕೆ ಗ್ರಾಹಕರಿಗೆ
438.14 ಕೋಟಿ ರೂ. ಉಚಿತ ವಿದ್ಯುತ್ ನೀಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ 2023 ರ ಜುಲೈ ನಿಂದ ಜನವರಿ 2025 ರ ವರೆಗೆ ಡಿಬಿಟಿ ಮೂಲಕ 1,98,825 ಫಲಾನುಭವಿಗಳಿಗೆ 225.65 ಲಕ್ಷ ರೂ. ಗಳನ್ನು ಭರಿಸಲಾಗಿದೆ, ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 3762 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಡಿಬಿಟಿ ಮೂಲಕ ಪ್ರತೀ ತಿಂಗಳು 5 ಕೋಟಿ 82 ಲಕ್ಷ ರೂ. ಗೂ ಹೆಚ್ಚು ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದರು.
ಐದು ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಸಣ್ಣ ಪುಟ್ಟ ಸಮಸ್ಯೆಗಳಿಂದ ಕೆಲವು ಅರ್ಹ ಫಲಾನುಭವಿಗಳ ನೋಂದಣಿಯಾಗದೇ ಈ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಇಂತಹ ಅರ್ಜಿಗಳನ್ನು ಆದ್ಯತೆಯ ಮೇಲೆ ನಿಯಮಾನುಸಾರ
ಅರ್ಹ ಫಲಾನುಭವಿಗಳನ್ನಾಗಿಸಿ, ಇವುಗಳ ಲಾಭ ಪಡೆಯುವಂತೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಈ ಯೋಜನೆಯ ಬಗ್ಗೆ ಹೆಚ್ಚು ಹೆಚ್ಚು
ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕಾಲೇಜುಗಳಲ್ಲಿ ಹಮ್ಮಿಕೊಳ್ಳುವುದರೊಂದಿಗೆ ಫಲಾನುಭವಿಗಳ ಸಂಖ್ಯೆಗಳನ್ನು ಹೆಚ್ಚಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾ.ರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಐದು ಗ್ಯಾರಂಟಿ ಯೊಜನೆಗಳಿಗೆ ಶೇ. 95 ಕ್ಕಿಂತಲೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಬಾಕಿ ಉಳಿದ ಅರ್ಹ ಪ್ರತಿಯೊಬ್ಬ ಫಲಾನುಭವಿಗಳಿಗೂ ಈ ಯೋಜನೆಯ ಲಾಭ ತಲುಪಬೇಕು ಎಂದರು.
ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಅನುಭವಗಳ ಹಾಗೂ ಅನಿಸಿಕೆ ಗಳ ಯಶೋಗಾಥೆಗಳನ್ನು ಕ್ರೂಢೀಕರಿಸಿ, ಪ್ರಚಾರ ಕೈಗೊಳ್ಳಬೇಕು ಎಂದ ಅವರು, ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡುವುದರೊಂದಿಗೆ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದರು.
ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರ ರಮೇಶ್ ಕಾಂಚನ್ ಮಾತನಾಡಿ, ಜಿಲ್ಲೆಯಲ್ಲಿ ಈ ಹಿಂದೆ ಕೆಲವು ಗ್ರಾಮೀಣ ಭಾಗಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ಗಳು ಸಂಚರಿಸುತ್ತಿದ್ದವು. ಆದರೆ ಕೋವಿಡ್ ನಂತರದಲ್ಲಿ ಸಾರಿಗೆ ಬಸ್ಗಳ ಕಾರ್ಯಾಚರಣೆ ನಿಂತಿದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಆದ್ಯತೆಯ ಮೇಲೆ ಬಸ್ಗಳ ಪುನರ್
ಸಂಚಾರವಾಗಬೇಕು ಎಂದು ಸಭೆಯಲ್ಲಿ ತಿಳಿಸಿದರು.
ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಮಾತನಾಡಿ, ಗೃಹಲಕ್ಷ್ಮಿ
ಯೋಜನೆಯಡಿ ಈಗಾಗಲೆ ಫಲಾನುಭವಿಗಳಾಗಿ ಅದರ ಲಾಭ ಪಡೆಯುತ್ತಿದ್ದ ಮನೆಯ ಯಜಮಾನಿ ಮರಣ ಹೊಂದಿದ್ದಲ್ಲಿ ಅವರ ಮುಂದಿನ ಉತ್ತರದಾಹಿಗಳನ್ನು ಯಜಮಾನಿಯನ್ನಾಗಿಸಲು ಬಿ.ಪಿ.ಎಲ್ ಕಾರ್ಡ್ಗಳ ತಿದ್ದುಪಡಿಗೆ ಕೊಟ್ಟಿದ್ದರೂ ಅವುಗಳ ತಿದ್ದುಪಡಿಯಾಗದೇ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಇವುಗಳ ತಿದ್ದುಪಡಿಯಾಗಬೇಕಿದೆ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳಾದ ಮೋಹನ್ ಪೂಜಾರಿ ಉಪ್ಪುಂದ, ಶಂಕರ್ ಶೇರಿಗಾರ್, ಹರಿಪ್ರಸಾದ್ ಶೆಟ್ಟಿ ಹಾಗೂ ನವೀನ್ಚಂದ್ರ ಎಸ್ ಸುವರ್ಣ, ಸಮಿತಿಯ ಸದಸ್ಯರುಗಳಾದ ಮಂಜುನಾಥ್ ಕುಲಾಲ್, ಸಯ್ಯದ್ ಕುರ್ಖಾನ್ ಯಾಸೀನ್, ರೋಷನ್ ಶೆಟ್ಟಿ, ಚಂದ್ರಶೇಖರ್ ಬಾಯರಿ, ಅಜಿತ್ ಹೆಗಡೆ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.












