ಸಹಕಾರಿ ಕಾಯ್ದೆಗಳಲ್ಲಿ ಆಗುವ ತಿದ್ದುಪಡಿಗಳ ಬಗ್ಗೆ ಹೆಚ್ಚು ಗಮನಹರಿಸಿ- ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಕಡಿಯಾಳಿಯ ದಿ ಓಷ್ಯನ್ ಪರ್ಲ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು, ಪ್ರಸಕ್ತ ವರ್ಷದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಇಡೀ ರಾಜ್ಯದಲ್ಲಿ ಶೇ.100ಕ್ಕೆ ನೂರರಷ್ಟು ಶಿಕ್ಷಣ ನಿಧಿ ಪಾವತಿಸಿದ ಹೆಗ್ಗಳಿಕೆ ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳಿಗೆ ಸಲ್ಲುತ್ತದೆ. ರಾಜ್ಯ ಸಹಕಾರ ಮಹಾಮಂಡಳದ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಸಹಕಾರಿ‌ ಯೂನಿಯನ್ ಶಿಕ್ಷಣ ತರಬೇತಿ ಈ ಕುರಿತು ನಿರಂತರ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಸಹಕಾರಿ ಕ್ಷೇತ್ರ ಎಂಬುವುದು ವಿಶ್ವಾಸ, ನಂಬಿಕೆಯೊಂದಿಗೆ ಕೆಲಸ ಮಾಡುವ ಸಂಸ್ಥೆ. ಜನರು ತಮ್ಮ ಆರ್ಥಿಕ ವ್ಯವಹಾರಗಳಿಗಾಗಿ ಸಹಕಾರಿ ಸಂಸ್ಥೆಗಳಲ್ಲಿ ಉಳಿತಾಯ ಠೇವಣಿ ಮಾಡುವುದರ ಮೂಲಕ ಸಹಕಾರ ನೀಡುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಸಹಕಾರಿ ಸಂಸ್ಥೆಗಳು ಜನರಿಗೆ ಸಾಲ ನೀಡುತ್ತಿವೆ. ಮುಂದಿನ ದಿನಗಳಲ್ಲಿ ಸಹಕಾರಿ ಕಾಯ್ದೆಗಳಲ್ಲಿ ಆಗುವ ತಿದ್ದುಪಡಿಗಳ ಬಗ್ಗೆ ಗಮನ ಹರಿಸಬೇಕು ಎಂದರು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಗಂಗಾಧರ್ ಶೆಟ್ಟಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಸಹಕಾರಿ ಯೂನಿಯನ್ ನಿರ್ದೇಶಕರಾದ ಶ್ರೀಧರ ಪಿಎಸ್, ಸುಧೀರ್ ವೈ, ಅನಿಲ್ ಎಸ್ ಪೂಜಾರಿ, ಪ್ರಸಾದ್ ಎಸ್ ಶೆಟ್ಟಿ, ಎನ್. ಮಂಜಯ್ಯ ಶೆಟ್ಟಿ, ಪ್ರದೀಪ್ ಯಡಿಯಾಳ, ಅರುಣ್ ಕುಮಾರ್ ಹೆಗ್ಡೆ, ಕರುಣಾಕರ ಶೆಟ್ಟಿ, ಸುರೇಶ್ ರಾವ್, ಗೋಪಿಕೃಷ್ಣ ರಾವ್, ಸಂಪನ್ಮೂಲ ವ್ಯಕ್ತಿಗಳಾದ ವಿಶ್ವನಾಥ್ ನಾಯರಿ, ಎನ್.ಜಿ. ಗೋಪಾಲ್, ಬಿಂದು ಬಿ. ನಾಯರಿ ಉಪಸ್ಥಿತರಿದ್ದರು. ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿದರು.