ಉಡುಪಿ: ಧರ್ಮಸ್ಥಳದ ಮೇಲೆ ವೈಚಾರಿಕ ಆಕ್ರಮಣ ನಡೆದಿದೆ. ಮೂರು ವರ್ಷದ ಹಿಂದೆ ಉಡುಪಿ ಕೃಷ್ಣಮಠದ ಮೇಲೂ ಆಕ್ರಮಣ ನಡೆದಿತ್ತು, ಸ್ವಲ್ಪ ದಿನದಲ್ಲಿ ಮೂಡುಬಿದರೆ ಮೇಲೆ ಆಕ್ರಮಣ ನಡೆಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದರು.
ಬಿಜೆಪಿ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಗಮನಸೆಳೆದಿದ್ದ ಧರ್ಮಸ್ಥಳ ಗ್ರಾಮದ ಶವಹೂತ ಪ್ರಕರಣದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದರು. ಹುಲಿಗೆ ರಕ್ತದ ರುಚಿ ಸಿಕ್ಕಿದೆ. ವೈಚಾರಿಕ ರಾಜಕೀಯದ ಮೂಲಕ ಶಬರಿಮಲೆಯಲ್ಲಿ ಸ್ವಲ್ಪ ರಕ್ತದ ರುಚಿ ನೋಡಿದ್ದರು. ಈಶ ಆಶ್ರಮ, ಶನಿ ಸಿಂಗಾಪುರದಲ್ಲೂ ರಕ್ತದ ರುಚಿ ನೋಡಿದ್ದರು. ಧರ್ಮಸ್ಥಳದಲ್ಲಿ ರಕ್ತದ ರುಚಿ ನೋಡುವ ಕೆಲಸ ಮಾಡುತ್ತಲೇ ಇದ್ದಾರೆ. ಹೀಗಾಗಿ ಈಗಾಗಲೇ ನಡೆದಿರುವ ಆಕ್ರಮಣಕ್ಕೆ ಶಿಕ್ಷೆ ಆಗಬೇಕು.ಮಾಡುತ್ತಿರುವ ಅಪಪ್ರಚಾರಕ್ಕೂ ಶಾಸ್ತಿ ಆಗಬೇಕು ಎಂದು ಬಿ.ಎಲ್ ಸಂತೋಷ್ ಒತ್ತಾಯಿಸಿದ್ದಾರೆ.
ಶಾಸ್ತಿ ಆಗುವ ಈ ಸಂಕಲ್ಪವನ್ನು ನಾವು ನಮ್ಮ ಕಾರ್ಯಾಲಯದಲ್ಲಿ ಮಾಡಬೇಕು. ಇದು ವ್ಯಕ್ತಿ ಅಥವಾ ಸಂಸ್ಥೆಗೆ ನಡೆದ ಆಕ್ರಮಣ ಅಲ್ಲ. ನಮ್ಮ ಶ್ರದ್ದೆ ನಂಬಿಕೆ, ವಿಷಯದ ಮೇಲೆ ಮಾಡಿರುವ ಅಕ್ರಮಣ ಇದು. ಉಡುಪಿ ಮೇಲೆ ಆಕ್ರಮಣ ಯಾಕೋ ಈಗ ಬಿಟ್ಟು ಬಿಟ್ಟಿದ್ದಾರೆ. ಮತ್ತೆ ಆಕ್ರಮಣ ಪಿಕ್ ಅಪ್ ಮಾಡ್ತಾರೋ ಗೊತ್ತಿಲ್ಲ. ಹಿಂದೂಗಳ ಶ್ರದ್ದೆಯ ವಿಚಾರ ಮತ್ತು ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ. ಗೋವು, ಕುಟುಂಬ ವ್ಯವಸ್ಥೆ, ಮೌಲ್ಯಗಳು ತೀರ್ಥಕ್ಷೇತ್ರಗಳು ಇವರ ಟಾರ್ಗೆಟ್ . ಕುಂಭಮೇಳದ ಮೇಲೆ ನಿರಂತರ ಅಪಪ್ರಚಾರ ನಡೆಯಿತು. ಕುಂಭಮೇಳಕ್ಕೆ ಹೋದರೆ ಜಗತ್ತಲ್ಲಿ ಇಲ್ಲದ ಕಾಯಿಲೆ ಬರುತ್ತದೆ ಎಂದು ಹೇಳಿದರು.
ದೇಶದ ನಂಬಿಕೆ ಬಹಳ ಗಟ್ಟಿಯಾಗಿದೆ. ಆರೋಪ ಬಂದ ಮೇಲೆ ಭಕ್ತರ ಸಂಖ್ಯೆ ಜಾಸ್ತಿ ಆಯಿತು.ನಾವು ಸವಾಲನ್ನು ಎದುರಿಸುತ್ತೇವೆ, ನಮ್ಮ ಸಮಾಜ ಸಶಕ್ತವಾಗಿದೆ.ದೇಶ ಮತ್ತು ಸಂಸ್ಕೃತಿಗೆ ಹಾಕಿರುವ ಸವಾಲಿಗೆ ಮುಟ್ಟಿ ನೋಡುವಂತೆ ಉತ್ತರ ಕೊಡುತ್ತೇವೆ ಎಂದು ಎಚ್ಚರಿಸಿದರು.


















