ಉಡುಪಿ: ಪ್ರಥಮ ಚಿಕಿತ್ಸೆ ಮತ್ತು ಪ್ರಕೃತಿ ವಿಕೋಪದ ಕುರಿತಾದ ತರಬೇತಿಯ ಮೂಲಕ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮಾಜಮುಖಿಯಾಗಲು ಉತ್ತಮ ಅವಕಾಶ. ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಸರಕಾರವು
ಕಡ್ಡಾಯಗೊಳಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.
ಅವರು ಶುಕ್ರವಾರ ಅಜ್ಜರಕಾಡು ಜಿಲ್ಲಾ ರೆಡ್ಕ್ರಾಸ್ ಸಭಾಂಗಣದಲ್ಲಿ, ಭಾರತೀಯ ರೆಡ್ಕ್ರಾಸ್ ರಾಜ್ಯ ಘಟಕ ಮತ್ತು ಉಡುಪಿ ಜಿಲ್ಲಾ ಘಟಕ
ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಯುವರೆಡ್ ಕ್ರಾಸ್ ಘಟಕ ವತಿಯಿಂದ ರೆಡ್ಕ್ರಾಸ್ ಅಧಿಕಾರಿಗಳು ಮತ್ತು ಸ್ವಯಂಸೇವಕರಿಗೆ ನಡೆದ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.
ಕುಂದಾಪುರ ರೆಡ್ಕ್ರಾಸ್ ಸಭಾಪತಿ ಜಯಕರ ಎಸ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯು ರಕ್ತದಾನಿಗಳ ಜಿಲ್ಲೆ ಎಂದು ಗುರುತಿಸಲ್ಪಟ್ಟಿದೆ. ಈ
ಪರಂಪರೆಯನ್ನು ರಕ್ತದಾನ ಮಾಡುವ ಮೂಲಕ ಮುಂದುವರೆಸುವ ಅಗತ್ಯವಿದೆ ಎಂದರು.ಮಂಗಳೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಯುವ ರೆಡ್ ಕ್ರಾಸ್ ಅನುಷ್ಠಾನದ ಬಗ್ಗೆ ಮಾತನಾಡಿದರು.
ಡಾ. ಕೀರ್ತಿ, ಅಶ್ವಿನ್ ಕುಮಾರ್ ಹಾಗೂ ಡಾ. ಸುರೇಶ್ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ರೆಡ್ಕ್ರಾಸ್ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ರೆಡ್ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್, ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ವ್ಯಾಪ್ತಿಯ ರೆಡ್ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.ರೆಡ್ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ರೆಡ್ಕ್ರಾಸ್ ಸದಸ್ಯ ರಾಘವೇಂದ್ರ ಪ್ರಭು ನಿರೂಪಿಸಿ, ಖಜಾಂಚಿ ರಮಾದೇವಿ ವಂದಿಸಿದರು.

















