ಉಡುಪಿ: ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.
ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದ ಸಕ್ರಿಯ ಕಾರ್ಯಕರ್ತರಾಗಿದ್ದ ಶ್ರೀನಿವಾಸ ಗಾಣಿಗ ಅವರು, ಮಂಗಳವಾರ ರಾತ್ರಿ ಕುಂದಾಪುರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವೊಂದನ್ನು ಮುಗಿಸಿ ತಮ್ಮ ಬೈಕಿನಲ್ಲಿ ಕಟ್ ಬೆಲ್ಲೂರು ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು ಎಂಟು ಗಂಟೆಯ ಹೊತ್ತಿಗೆ ತಲ್ಲೂರು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ವಿರುದ್ದ ದಿಕ್ಕಿನಿಂದ ಅತೀ ವೇಗವಾಗಿ ಬಂದ ಬೈಕ್ ಇವರ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಶ್ರೀನಿವಾಸ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಸ್ಥಳೀಯರು ತಕ್ಷಣವೇ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ತೀವ್ರ ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
















