ಮುಂಗಾರು ಮಳೆಗೆ ಮಂಗಳೂರು ರೆಡಿ; ಎಲ್ಲಾ ತುರ್ತು ಸೇವೆಗಳನ್ನು ನಿಭಾಯಿಸಲು ಸಿದ್ದವಾದ ಜಿಲ್ಲಾಡಳಿತ

ಮಂಗಳೂರು: ಮುಂಗಾರು ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ, ಭಾರೀ ಮಳೆಯಿಂದ ಸಂಭವಿಸಬಹುದಾದ ಹಾನಿಯನ್ನು ತಡೆಯಲು ಮಂಗಳೂರು ಜಿಲ್ಲಾಡಳಿತ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ.

ಈ ಬಾರಿ ವಿಕೇಂದ್ರೀಕೃತ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಯೊಂದು ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಇನ್ಸಿಡೆಂಟ್ ಕಮಾಂಡರ್‌ಗಳನ್ನು ನೇಮಕ ಮಾಡಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ರೂ. 30,000 ಅನುದಾನವನ್ನು ಮೀಸಲಿಡಲಾಗಿದೆ. ಭೂಕುಸಿತ, ಮನೆಗಳಿಗೆ ನೀರು ನುಗ್ಗುವುದು, ಮರಗಳು ಬೀಳುವುದು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಈ ನಿಧಿಯನ್ನು ಬಳಸಿಕೊಳ್ಳಬಹುದು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತಿದ್ದು, ಸಮರ್ಪಿತ ಸಿಬ್ಬಂದಿ ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಅಗತ್ಯವಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿಯ ಸಹಕಾರವೂ ಪಡೆಯಲಾಗುತ್ತದೆ.

ಅರಣ್ಯ ಇಲಾಖೆಯ ಅನುಮತಿ ಪಡೆದು ಅಪಾಯಕಾರಿ ಮರಗಳ ಕೊಂಬೆಗಳನ್ನು ಈಗಾಗಲೇ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಮಳೆಗಾಲದಲ್ಲಿ ಸಂಭವಿಸಬಹುದಾದ ಅಪಾಯವನ್ನು ಕಡಿಮೆಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ. ಜೊತೆಗೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲಾ ಸಾಧನಗಳನ್ನು ಸಿದ್ಧವಾಗಿಡಲಾಗಿದೆ.

ಕಡಲತೀರ ಪ್ರದೇಶಗಳಾದ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಹಾಗೂ ಸುರತ್ಕಲ್ ಭಾಗಗಳಲ್ಲಿ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಗೃಹರಕ್ಷಕ ದಳವನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಭೂಕುಸಿತ ಹಾಗೂ ಪ್ರವಾಹದ ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸಲು ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಸಜ್ಜುಗೊಳಿಸಲಾಗಿದೆ.

ಮಳೆನೀರು ಸರಾಗವಾಗಿ ಹರಿಯುವಂತೆ ಪ್ರಮುಖ ಚರಂಡಿಗಳ ಹೂಳು ತೆರವು ಕಾರ್ಯ ಆರಂಭವಾಗಿದೆ. ಅಸುರಕ್ಷಿತ ಶಾಲಾ ಕಟ್ಟಡಗಳ ದುರಸ್ತಿ, ಅಂಗನವಾಡಿ ಹಾಗೂ ಶಾಲಾ ಆವರಣದಲ್ಲಿರುವ ಅಪಾಯಕಾರಿ ಮರಗಳ ತೆರವುಗೂ ಸೂಚನೆ ನೀಡಲಾಗಿದೆ.

ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯ ತಪ್ಪಿಸಲು ಮೆಸ್ಕಾಂಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಬೆಟ್ಟ ಹಾಗೂ ಇಳಿಜಾರು ಪ್ರದೇಶಗಳು, ಸಮುದ್ರ ಕೊರೆತಕ್ಕೆ ಒಳಗಾಗುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ವಾಸಿಸುವ ಜನರಿಗೆ ಅಗತ್ಯವಿದ್ದರೆ ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.

ಒಟ್ಟಾರೆ, ಮುಂಗಾರು ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.