ಉಡುಪಿ: ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಟೆಂಪೋ ಡಿಕ್ಕಿ: ಚಾಲಕ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ.
ಮೃತರನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಪಿ. (29) ಎಂದು ಗುರುತಿಸಲಾಗಿದೆ.


ಅಪಘಾತದ ತೀವ್ರತೆಗೆ ಟೆಂಪೋದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ.


ಅಪಘಾತದ ಬಳಿಕ ಟೆಂಪೋದಲ್ಲಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ ಪಡಬೇಕಾಯಿತು. ಸಮಾಜಸೇವಕ ನಿತ್ಯಾನಂದ ಒಳಕಾಡು, ಸಂಚಾರಿ ಠಾಣೆ ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಹೊರತೆಗೆದರು.
ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.