ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ -9’ ಭರತನಾಟ್ಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ಜರುಗಿತು.
ಭ್ರಾಮರೀ ನಾಟ್ಯಾಲಯದ ಗುರುಗಳಾದ ವಿದ್ವಾನ್ ಕೆ. ಭವಾನಿ ಶಂಕರ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಉದ್ಘಾಟನೆಯ ನಂತರ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಪ್ರಾತ್ಯಕ್ಷಿಕೆ ಆರಂಭವಾಯಿತು. ಭರತನಾಟ್ಯ ಎಂದರೇನು? ಅದರ ಉಗಮ ಹಾಗೂ ಇಂದಿನ ತಲೆಮಾರಿನಲ್ಲಿ ಕಲೆ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರವೇನು? ಎಂಬ ಬಗ್ಗೆ ಸುದೀರ್ಘವಾಗಿ ವಿವರಿಸಲಾಯಿತು.

ಭರತನಾಟ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸಂವಾದ ಹಾಗೂ ಚರ್ಚೆಯನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ನೆರೆದಿದ್ದ ಶಾಲಾ ವಿದ್ಯಾರ್ಥಿಗಳಿಗೆ ಭರತನಾಟ್ಯದ ಮೂಲಭೂತವಾದ ಕೆಲವು ಹೆಜ್ಜೆಗಳನ್ನು ಹೇಳಿಕೊಡುವ ಮೂಲಕ ಕಲೆಯ ಪ್ರಾಯೋಗಿಕ ಅನುಭವವನ್ನು ನೀಡಲಾಯಿತು.
ಈ ಅಪೂರ್ವ ಪ್ರಾತ್ಯಕ್ಷಿಕೆಯಲ್ಲಿ ನಾಟ್ಯಾಲಯದ ಹಿರಿಯ ವಿದ್ಯಾರ್ಥಿಗಳೂ, ನೃತ್ಯ ವಿದುಷಿಯರೂ ಆದ ಶಿಫಾಲಿ, ಯಶಸ್ವಿ, ಕಾತ್ಯಾಯಿನಿ, ಸ್ವಾತಿ, ವಿ. ಸಾತ್ವಿಕ್, ದಿಗಂತ್ ಹಾಗೂ ಪ್ರಜ್ವಲ್ ಕುಮಾರ್ ಅವರು ಭಾಗವಹಿಸಿ, ತಮ್ಮ ಪ್ರತಿಭೆಯ ಮೂಲಕ ಕಾರ್ಯಕ್ರಮದ ರಂಗನ್ನು ಹೆಚ್ಚಿಸಿದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಶುಭಹಾರೈಸಿದರು. ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲರಾದ ಅನಿತಾ ಕುಮಾರಿ ಹಾಗೂ ಉಪ ಪ್ರಾಂಶುಪಾಲರಾದ ಸ್ಪೂರ್ತಿ ಎ. ಉಪಸ್ಥಿತರಿದ್ದರು. ಶಿಕ್ಷಕಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.

















