ಗುವಾಹಾಟಿ: ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ. ರಾಜ್ಯದ ಏಳು ಜಿಲ್ಲೆಗಳ 3 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದು, ಈ ವರ್ಷದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ನೂರಾರು ಗ್ರಾಮಗಳು ಜಲಾವೃತಗೊಂಡಿದ್ದು, 21,500 ಹೆಕ್ಟೇರ್ಗೂ ಹೆಚ್ಚು ಕೃಷಿ ಭೂಮಿ ನೀರಿನಲ್ಲಿ ಮುಳುಗಿದೆ.

ಅಧಿಕೃತ ಮಾಹಿತಿಯ ಪ್ರಕಾರ ಶಿವಸಾಗರ, ಚರೈಡಿಯೊ, ಗೋಲಾಘಾಟ್, ಜೋರ್ಹತ್, ನಾಗಾಂವ್, ವಿಶ್ವನಾಥ್ ಹಾಗೂ ಕಾಮರೂಪ್ ಜಿಲ್ಲೆಗಳು ಪ್ರವಾಹದಿಂದ ತೀವ್ರವಾಗಿ ಬಾಧಿತವಾಗಿವೆ. ಒಟ್ಟು 21 ಕಂದಾಯ ವೃತ್ತಗಳ ವ್ಯಾಪ್ತಿಯ 551 ಗ್ರಾಮಗಳು ಜಲಾವೃತಗೊಂಡಿದ್ದು, ಸುಮಾರು 3,00,031 ಜನರು ಸಂಕಷ್ಟ ಎದುರಿಸುತ್ತಿದ್ದಾರೆ.

ರಾಜ್ಯಾದ್ಯಂತ 21,523.08 ಹೆಕ್ಟೇರ್ ಕೃಷಿ ಭೂಮಿ ಪ್ರವಾಹದ ನೀರಿನಲ್ಲಿ ಮುಳುಗಿದ್ದು, ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಇತ್ತೀಚಿನ ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಶಿವಸಾಗರ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಈ ವರ್ಷದ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.
ಇದರ ಮಧ್ಯೆ ಕಾಮರೂಪ್ ಮೆಟ್ರೋ ಜಿಲ್ಲೆಯಲ್ಲಿ ನಗರ ಪ್ರವಾಹವೂ ತಲೆದೋರಿದೆ. ಪದುಂಬರಿ, ಬೊರಗಾಂವ್, ಎಕ್ಸೆಲ್ಕೇರ್ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶ, ಲಚಿತ್ ನಗರ, ಝೂ ರಸ್ತೆ, ರುಕ್ಮಿಣಿಗಾಂವ್, ಅನಿಲ್ ನಗರ, ನಬೀನ್ ನಗರ, ಸತ್ಗಾಂವ್, ಬೆಹಾರ್ಬಾರಿ, ಹತಿಗಾಂವ್, ವೈರ್ಲೆಸ್, ಜೊರಾಬಾತ್ ಹಾಗೂ ಜುಬೀನ್ ಕ್ಷೇತ್ರದ ಸಮೀಪದ ಕಮರಕುಚಿ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಆದರೆ, ಈ ಪ್ರದೇಶಗಳಲ್ಲಿ ಜನರಿಗೆ ನೇರ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾದ ಜಿಲ್ಲೆಗಳಿಗೆ ರಾಜ್ಯ ಸರ್ಕಾರವು ಪರಿಹಾರ ಕಾರ್ಯವನ್ನು ವೇಗಗೊಳಿಸಿದೆ. ಆಹಾರ ಧಾನ್ಯ, ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ಒಳಗೊಂಡ 30 ಟ್ರಕ್ ಪರಿಹಾರ ಸಾಮಗ್ರಿಗಳನ್ನು ಬಾಧಿತ ಪ್ರದೇಶಗಳಿಗೆ ರವಾನಿಸಲಾಗಿದೆ. ಅಸ್ಸಾಂ ಗಣ ಪರಿಷತ್ನ ಸಂಸದರು, ಶಾಸಕರು, ಹಿರಿಯ ನಾಯಕರು ಹಾಗೂ ಅಸ್ಸಾಂ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.















