ರಾಹುಲ್ ಗಾಂಧಿ ವರ್ತನೆ ಪ್ರಜಾಪ್ರಭುತ್ವಕ್ಕೆ ಕಳಂಕ: ಕೋಟ ಶ್ರೀನಿವಾಸ ಪೂಜಾರಿ ಟೀಕೆ

ಉಡುಪಿ: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುವ ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸುವ ರೀತಿಯ ಅವರ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಪಮಾನಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಯಾವ ಸ್ಥಳದಲ್ಲಿ ಯಾವ ರೀತಿಯಲ್ಲಿ ವರ್ತಿಸಬೇಕು, ಯಾವ ರೀತಿಯಲ್ಲಿ ಮಾತನಾಡಬೇಕು ಎನ್ನುವ ಪ್ರೌಢಿಮೆ ಇನ್ನೂ ಅವರಿಗೆ ಬಂದಿಲ್ಲ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದ್ದು, ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ತಮ್ಮ ನಿಲುವು ಮತ್ತು ಭಾಷಣಗಳಲ್ಲಿ ಸಂಯಮ ಪಾಲಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.