ಉಡುಪಿ: ಯಾವುದೇ ಪರವಾನಗಿ ಪಡೆಯದೆ ಸರ್ಕಾರಿ ಜಮೀನಿನಲ್ಲಿ ಸ್ಫೋಟಕ ವಸ್ತು ಬಳಸಿ ಬಂಡೆ ಸ್ಫೋಟಿಸಿದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಸೆ.5ರಂದು ಬೆಳಿಗ್ಗೆ 11ರ ಸುಮಾರಿಗೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಉಡುಪಿ ತಾಲ್ಲೂಕಿನ ಮರ್ಣೆ ಗ್ರಾಮದ ಕುಕ್ಕುಪಲ್ಕೆ ಸರ್ಕಾರಿ ಜಮೀನಿನಲ್ಲಿ ಘಟನೆ ನಡೆದಿದೆ.
ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಸ್ಫೋಟಕ ವಸ್ತು ಬಳಸಿ ಜಮೀನಿನಲ್ಲಿದ್ದ ಬಂಡೆಕಲ್ಲನ್ನು ಸ್ಫೋಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಮಣಿಪಾಲ ಠಾಣೆಯ ಪಿಎಸ್ಐ ತಿಮ್ಮೇಶ್ ಬಿ.ಎನ್. ತನಿಖೆ ಕೈಗೊಂಡು ಕಾರ್ಕಳ ತಾಲ್ಲೂಕಿನ ಇನ್ನಾ ಗ್ರಾಮದ ಕೆ. ಗೋವಿಂದರಾಜ್ (40) ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಶೇಖಪ್ಪ ಚಲವಾದಿ ಅಲಿಯಾಸ್ ಚಂದ್ರು (28) ಅವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ KA-28-TA-6421 ನೋಂದಣಿ ಸಂಖ್ಯೆಯ ಡ್ರಿಲ್ಲಿಂಗ್ ಕಂಪ್ರೆಸರ್ ಅಳವಡಿಸಿದ ಮಹೀಂದ್ರಾ ಟ್ರ್ಯಾಕ್ಟರ್ ಹಾಗೂ KA-19-ME-7707 ನೋಂದಣಿ ಸಂಖ್ಯೆಯ ಗ್ರೇ ಬಣ್ಣದ ನಿಶಾನ್ ಟೆರಾನೊ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















