ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಂಸತ್ತು ಸಭೆಯ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಸೆಪ್ಟಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು.

ಸೆ. 16 ರಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಫರ್ಧೆಗಳು ಆರಂಭವಾಗಲಿದ್ದು, ಅಕ್ಟೋಬರ್ 10 ರ ಒಳಗಾಗಿ ತಾಲೂಕು ಮಟ್ಟದ ಸ್ಪರ್ಧೆಗಳನ್ನು ಪೂರ್ಣಗೊಳಿಸಬೇಕು.

ಉತ್ತಮ ವಾಕ್ ಚಾತುರ್ಯ ಇರುವ ಮಕ್ಕಳನ್ನು ಪ್ರೇರೇಪಿಸಿ, ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದ ಅವರು, ಸಂಸತ್ತು / ವಿಧಾನಸಭೆಯ ಮಾದರಿಯಲ್ಲಿ ಸಭಾಂಗಣವನ್ನು ಸಿದ್ಧಪಡಿಸಿ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ನಡೆಯುವ ಯುವ ಸಂಸತ್ತು ಸಭೆಗೆ ಪ್ರತಿ ತಾಲೂಕಿನಿಂದ ಆಯ್ದ ವಿದ್ಯಾರ್ಥಿಗಳನ್ನು ಕಳುಹಿಸಿಕೊಡಬೇಕು. ಅ. 11 ರಿಂದ 30 ರ ಒಳಗಾಗಿ ಜಿಲ್ಲಾ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು.

ಅತ್ಯುತ್ತಮವಾಗಿ ಚರ್ಚೆಯಲ್ಲಿ ಪಾಲ್ಗೊಂಡ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ, ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಿಕೊಡಲಾಗುವುದು ಎಂದರು.

ಸಂವಿಧಾನ ದಿನಾಚರಣೆಯ ದಿನವಾದ ನವೆಂಬರ್ 26 ರಂದು ಎಲ್ಲಾ 224 ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಬಂದ ವಿದ್ಯಾರ್ಥಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಯುವ ಸಂಸತ್ ಸಭೆಯು ಬೆಂಗಳೂರಿನಲ್ಲಿ ನಡೆಯಲಿದೆ ಎಂದ ಅವರು, ಸರಕಾರದ ನಿರ್ದೇಶನದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಜಿಲ್ಲಾ ವಕೀಲರ ಸಂಘದ ಸಮನ್ವಯದೊಂದಿಗೆ ಅಚ್ಚುಕಟ್ಟಾಗಿ ನಡೆಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಇ.ಓಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.