ಪಟ್ನಾ: ಆರ್ ಜೆಡಿ ಪಕ್ಷದ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಜೈಲಿನಲ್ಲಿ ಇದ್ದುಕೊಂಡೇ ಬಿಹಾರದ ಎನ್ ಡಿಎ ಮೈತ್ರಿ ಕೂಟ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸುತ್ತಿದ್ದಾರ.?. ಈ ರೀತಿಯ ಸುದ್ದಿಯೊಂದು ಈಗ ಬಿಹಾರಾದ್ಯಂತ ಸದ್ದು ಮಾಡುತ್ತಿದೆ. ಅಲ್ಲದೆ, ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಕೆಡವಲು ಲಾಲು ಬಿಹಾರದ ಎನ್ಡಿಎ ಶಾಸಕರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ಆರೋಪಿಸಿದ್ದಾರೆ.
ಮೇವು ಹಗರಣ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿರುವ 72 ವರ್ಷ ವಯಸ್ಸಿನ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸದ್ಯ ರಾಂಚಿಯಲ್ಲಿದ್ದಾರೆ. ಆರಂಭದಲ್ಲಿ ಹಾಟ್ವಾರ್ ಸೆಂಟ್ರಲ್ ಜೈಲಿನಲ್ಲಿದ್ದ ಅವರನ್ನು ಆರೋಗ್ಯ ಸಮಸ್ಯೆಯಿಂದಾಗಿ ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಲಾಲು ಪ್ರಸಾದ್ ಅವರು ರಾಂಚಿಯಿಂದ ಎನ್ಡಿಎ ಶಾಸಕರಿಗೆ ದೂರವಾಣಿ ಕರೆ ಮಾಡಿದ್ದಾರೆ. ಮಂತ್ರಿ ಸ್ಥಾನಗಳ ಭರವಸೆ ನೀಡುತ್ತಿದ್ದಾರೆ ಎಂದು ಮೋದಿ ದೂರಿದ್ದಾರೆ.
ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ 75 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚಿಸಲು ಅಗತ್ಯವಿದ್ದ ಮ್ಯಾಜಿಕ್ ನಂಬರ್ 122ರನ್ನು ತಲುಪಲು ಮಹಾಘಟಬಂಧನಕ್ಕೆ ಸಾಧ್ಯವಾಗಿಲ್ಲ. 114 ಸ್ಥಾನಗಳನ್ನು ಹೊಂದಿರುವ ಮಹಾಘಟಬಂಧನ್ ಸರ್ಕಾರ ರಚಿಸುವ ಉದ್ದೇಶದಿಂದ ಬಿಜೆಪಿ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎನ್ನಲಾಗಿದೆ.












