ಶೀಘ್ರದಲ್ಲೇ 6 ಸಾವಿರ ಪೊಲೀಸ್ ಸಿಬ್ಬಂದಿಯ ನೇಮಕಾತಿ: ಗೃಹ ಸಚಿವ ಬೊಮ್ಮಾಯಿ

ಕಾರ್ಕಳ: ಪ್ರಸಕ್ತ ವರ್ಷದಲ್ಲಿ ರಾಜ್ಯ ಸರಕಾರವು 6 ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಿದೆ. ಮುಂದಿನ ಮೂರು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕಾತಿಯಾಗಲಿದ್ದು, ನೇಮಕಾತಿ ವೇಳೆ ಶೇ. 25 ರಷ್ಟು ಮಹಿಳೆಯರಿಗೆ ಮತ್ತು ಶೇ. 2ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದರು.

ಕಾರ್ಕಳ ಪೊಲೀಸ್‌ ವಸತಿ ಗೃಹವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಪೊಲೀಸ್‌ ಇಲಾಖೆ ಡ್ರಗ್ಸ್‌ ಸೇವನೆ, ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕಳೆದ ಹತ್ತು ವರ್ಷದಲ್ಲಿ ಸೀಜ್‌ ಮಾಡಿದಷ್ಟು ಪ್ರಮಾಣದ ಡ್ರಗ್ಸ್ ಅನ್ನು ನಮ್ಮ ಸರಕಾರ ಆಡಳಿತಕ್ಕೆ ಬಂದ 10 ತಿಂಗಳಲ್ಲಿ ಮಾಡಿದ್ದು, ಸಿಂಥೆಟಿಕ್ ಡ್ರಗ್ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದರು.

ಹೆಬ್ರಿಯಲ್ಲಿ ಪೊಲೀಸ್ ಠಾಣೆ ಸ್ಥಾಪಿಸುವಂತೆ ಶಾಸಕ ಸುನಿಲ್‌ ಕುಮಾರ್‌ ಮನವಿ ಮಾಡಿದ್ದು, ಅದರಂತೆ ಶೀಘ್ರದಲ್ಲೇ ಹೆಬ್ರಿಗೆ ಪೊಲೀಸ್‌ ಠಾಣೆ ಮಂಜೂರು ಮಾಡಲಾಗುವುದು. ಹಾಗೆ ಅಗ್ನಿ ಶಾಮಕ ಠಾಣೆ ತೆರೆಯುವ ನಿಟ್ಟಿನಲ್ಲೂ ಪ್ರಯತ್ನಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕಾರ್ಕಳ ಶಾಸಕ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಜಿ. ಜಗದೀಶ್‌, ಸಿಇಒ ನವೀನ್‌ ಭಟ್‌, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್‌ಶೆಟ್ಟಿ, ತಾಪಂ ಅಧ್ಯಕ್ಷೆ ಸೌಭಾಗ್ಯ ಮಡಿವಾಳ್‌, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ ಇದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಸ್ವಾಗತಿಸಿದರು. ಪಶ್ಚಿಮ ವಲಯ ಪೊಲೀಸ್ ಮಹಾನಿರ್ದೇಶಕ ದೇವಜ್ಯೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಕಳ ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ವಂದಿಸಿದರು. ನಿರಂಜನ್‌ ಜೈನ್‌ ಕಾರ್ಯಕ್ರಮ ನಿರೂಪಿಸಿದರು.