ಉಡುಪಿ: ಮಾ. 20ರಿಂದ ಜಿಲ್ಲಾ ಬಿಜೆಪಿಯಿಂದ ಗ್ರಾಮ ವಾಸ್ತವ್ಯ; ಕುಯಿಲಾಡಿ

ಉಡುಪಿ: ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಮಾ. 20ರಿಂದ ಗ್ರಾಮಾಂತರ ಪ್ರದೇಶದ 32 ಮಹಾಶಕ್ತಿ ಕೇಂದ್ರದಲ್ಲಿ ಗ್ರಾಮ ವಾಸ್ತವ್ಯ ಹೂಡಲು ಜಿಲ್ಲಾ ಬಿಜೆಪಿ ತೀರ್ಮಾನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿದಿನ 3 ಗಂಟೆಗೆ 5ರಿಂದ 6 ಮಂದಿಯ ತಂಡ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ವಾಸ್ತವ್ಯ ಮಾಡಲಿದ್ದು, ಸಂಜೆ 5ಗಂಟೆಗೆ ಸಭಾ ಕಾರ್ಯಕ್ರಮ, ನಂತರ ಪೇಜ್ ಪ್ರಮುಖ್, ಸಕ್ರಿಯ ಕಾರ್ಯಕರ್ತರೊಂದಿಗೆ ಸಮಾಲೋಚನೆ, ಬೂತ್ ಸಮಿತಿ ಕಾರ್ಯವೈಖರಿ ಪರಿಶೀಲನೆ ನಡೆಯಲಿದೆ ಎಂದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ. ಈ ಬಗ್ಗೆ ಜನಜಾಗೃತಿ ಮೂಡಿಸಲು ಎಪ್ರಿಲ್ 2ನೇ ವಾರ ಬೈಂದೂರಿನಿಂದ ಉಡುಪಿವರೆಗೆ ಜಿಲ್ಲಾ ಬಿಜೆಪಿ ವತಿಯಿಂದ 3 ದಿನದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆ 5 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಪಂ ಅಧ್ಯಕ್ಷ ದಿನಕರ ಬಾಬು, ಸದಸ್ಯೆ ಶಿಲ್ಪಾ ಸುವರ್ಣ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಸಹ ವಕ್ತಾರ ಶಿವಕುಮಾರ್, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಇದ್ದರು.