ನವದೆಹಲಿ: ಮುಖ್ಯಮಂತ್ರಿ ಬದಲಾವಣೆ ವಿಚಾರ ತಣ್ಣಗಾಯ್ತು ಎನ್ನುವಾಗಲೇ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿರುವುದು ಬಹಳಷ್ಟು ಕುತೂಹಲ ಸೃಷ್ಟಿಸಿದೆ.
ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಪರೀಕ್ಷೆ ಬರೆದಿದ್ದೇವೆ, ಶೀಘ್ರವೇ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಯೋಗೇಶ್ವರ ದೆಹಲಿಗೆ ತೆರಳಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಶುಕ್ರವಾರ ತಡರಾತ್ರಿ ದೆಹಲಿಗೆ ತೆರಳಿರುವ ಅವರು, ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡದೆ ಖಾಸಗಿ ಹೋಟೆಲ್ನಲ್ಲಿ ತಂಗಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಒತ್ತಡ ಹೇರುವ ನಿಟ್ಟಿನಲ್ಲಿ ಅವರು ಕೆಲವು ಮುಖಂಡರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.
ಇದೇ ವೇಳೆ ದೆಹಲಿಗೆ ತೆರಳಿರುವ ಸಿ.ಟಿ. ರವಿ ಅವರೂ, ನಾನು ಯೋಗೇಶ್ವರ್ ಜತೆ ಬಂದಿಲ್ಲ. ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಬಂದಿದ್ದಾಗಿ ತಿಳಿಸಿದ್ದಾರೆ.