ಉಡುಪಿ: ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಮುಕ್ತ ವಾತಾವರಣದಲ್ಲಿ, ಪಾರದರ್ಶಕವಾಗಿ ಯಾವುದೇ ಗೊಂದಲಗಳಿಗೊಳಗಾಗದಂತೆ ಪರೀಕ್ಷೆಯನ್ನು ಬರೆಯುವ ಅವಕಾಶ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ 18 ರ ವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹೊಸದಾಗಿ 14,597, ಖಾಸಗಿ 326 ಹಾಗೂ 349 ಮರು ಪರೀಕ್ಷೆ ಬರಯುವವರು ಸೇರಿದಂತೆ ಒಟ್ಟು 15,272 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 2203 ವಿದ್ಯಾರ್ಥಿಗಳು, 2589 ವಿದ್ಯಾರ್ಥಿನಿಯರು ಒಟ್ಟು 4792, ವಾಣಿಜ್ಯ ವಿಭಾಗದಲ್ಲಿ 3935 ವಿದ್ಯಾರ್ಥಿಗಳು ಹಾಗೂ 3915 ವಿದ್ಯಾರ್ಥಿನಿಯರುಗಳು ಸೇರಿ ಒಟ್ಟು 7850 ಮತ್ತು ಕಲಾ ವಿಭಾಗದಲ್ಲಿ 796 ವಿದ್ಯಾರ್ಥಿಗಳು ಹಾಗೂ 728 ವಿದ್ಯಾರ್ಥಿನಿಯರು ಸೇರಿ ಒಟ್ಟು 1524 ವಿದ್ಯಾರ್ಥಿಗಳು ಇದ್ದಾರೆ.
ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಿ, ಯಶಸ್ವಿಯಾಗಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರಶ್ನೆ ಪತ್ರಿಕೆ ವಿತರಿಸುವ ತಂಡ, ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರ ನೇಮಕ, ಪ್ರಶ್ನೆ ಪತ್ರಿಕೆ ಪಾಲಕರ ತಂಡ, ಜಿಲ್ಲೆಯ ಮಾರ್ಗಾಧಿಕಾರಿಗಳ ತಂಡ, ಪರೀಕ್ಷೆಯ ಪರಿವೀಕ್ಷಣೆಯ ಸಂಚಾರಿ ಜಾಗೃತ ದಳ ಮತ್ತಿತರ ತಂಡಗಳನ್ನು ನೇಮಿಸಲಾಗಿದೆ ಎಂದರು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಕಾಲಾವಧಿಯೊಳಗೆ ಹಾಜರಾಗಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಮಾಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಗಳಿಂದ ಪಡೆದು, ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಯಾವುದೇ ಗೊಂದಲಗಳಿಲ್ಲದೇ ವಿತರಿಸಬೇಕೆಂದ ಅವರು, ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆಯ ಬಂಡಲ್ ತೆರೆಯುವಾಗ ಹಾಗೂ ಉತ್ತರ ಪತ್ರಿಕೆ ಸ್ವೀಕರಿಸಿ, ಬಂಡಲ್ ಮಾಡುವಾಗ ಸಿ.ಸಿ.ಟಿ.ವಿ ವೀಕ್ಷಣೆಯಲ್ಲಿ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳ ವಿರುದ್ಧ ದಂಡ ಪ್ರಕ್ರಿಯ ಸಂಹಿತೆ ಕಲಂ 107 ಮತ್ತು 108 ರ ಅಡಿಯಲ್ಲಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ತಾಲೂಕು ದಂಡಾಧಿಕಾರಿಗಳು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಪರೀಕ್ಷೆ ಅಕ್ರಮಗಳಾದ ಪ್ರಶ್ನೆ ಪತ್ರಿಕೆ ಸೋರಿಕೆ, ಅವುಗಳ ಖರೀದಿ ಮತ್ತು ಮಾರಾಟ, ಮೊಬೈಲ್ ಫೋನ್ ಅಥವಾ ಎಲೆಕ್ಟ್ರಾನಿಕ ಉಪಕರಣಗಳ ಮುಖಾಂತರ ಪ್ರಶ್ನೆ ಪತ್ರಿಕೆ ಸೋರಿಕೆಗೆ ವಿದ್ಯಾರ್ಥಿ ಹಾಗೂ ವ್ಯಕ್ತಿಗಳೊಂದಿಗೆ ಸಹಕರಿಸುವುದು, ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹರಡುವುದು, ಅಕ್ರಮಕ್ಕೆ ಪ್ರೇರೇಪಿಸುವುದು ಮತ್ತು ಪ್ರೋತ್ಸಾಹಿಸುವುದು ಕಂಡು ಬಂದಲ್ಲಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಈ ಅಕ್ರಮಗಳಲ್ಲಿ ಭಾಗಿಯಾದ ವ್ಯಕ್ತಿಗಳಿಗೆ 5 ವರ್ಷಗಳ ಕಾಲ ಜೈಲುವಾಸ, 5 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಾಟ್ಸ್ಆಪ್ ಗ್ರೂಪ್ಗಳಲ್ಲಿ ಈ ಹಿಂದೆ ಪರೀಕ್ಷೆಗಳಲ್ಲಿ ಬಳಸಿರುವ ಪ್ರಶ್ನೆ ಪತ್ರಿಕೆಗಳು, ಕೈ ಬರಹ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಿ, ವದಂತಿಗಳನ್ನು ಹಬ್ಬಿಸಿ, ವಿದ್ಯಾರ್ಥಿ, ಪೋಷಕರು ಹಾಗೂ ಸಾರ್ವಜನಿಕರಿಗೆ ವಿನಾಕಾರಣ ಗೊಂದಲ ಸೃಷ್ಟಿಸಿದ್ದಲ್ಲಿ ಅಂತಹವರ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ, ಪರೀಕ್ಷಾ ಕೊಠಡಿಗಳಲ್ಲಿ ಗೌಪ್ಯ ವಸ್ತುಗಳ ಲೋಡಿಂಗ್, ಅನ್ಲೋಡಿಂಗ್, ಠೇವಣಿ ಹಾಗೂ ವಿತರಣೆ ಕಾರ್ಯವನ್ನು ಸಿಸಿಟಿವಿ ವೀಕ್ಷಣೆಯಲ್ಲಿ ನಡೆಸುವ ಹಿನ್ನೆಲೆ, ಅವುಗಳ ಕಾರ್ಯ ನಿರ್ವಹಣೆಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರಗಳು, ಗೌಪ್ಯ ವಸ್ತುಗಳನ್ನು ಸಾಗಿಸುವ ಮಾರ್ಗಗಳು ಸಶಸ್ತ್ರ ಸಹಿತ ಪೊಲೀಸ್ ಬೆಂಗಾವಲಿನಲ್ಲಿ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರದ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದ ಅವರು, ಅವುಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
















