ಕುಂದಾಪುರ: ಕಳಪೆ ಕಾಮಗಾರಿಯಿಂದ ಇಲ್ಲಿನ ಗಂಗೊಳ್ಳಿ ಬಂದರಿನಲ್ಲಿ 12 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಿಸಿದ್ದ ಜೆಟ್ಟಿ ಕುಸಿದಿದ್ದು, ನಿರ್ಮಾಣ ಕಾಮಗಾರಿಯು ನೀರಿನಲ್ಲಿಟ್ಟ ಹೋಮದಂತಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಸಮಸ್ಯೆಗೆ ತುತ್ತಾಗುತ್ತಿದ್ದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಜೆಟ್ಟಿ ಭಾಗವು ನಿರಂತರವಾಗಿ ಕುಸಿಯುತ್ತಿದ್ದರೂ ಕಾಮಗಾರಿ ಗುತ್ತಿಗೆ ವಹಿಸಿಕೊಂಡವರು ಇತ್ತ ಕಡೆ ತಲೆ ಕೂಡಾ ಹಾಕಿಲ್ಲ ಎಂಬ ಆರೋಪ ಕೇಳಿ ಬಂದಿದೆ.
13 ವರ್ಷಗಳ ಹಿಂದೆ ಗಂಗೊಳ್ಳಿ ಜೆಟ್ಟಿ ನಿರ್ಮಾಣವಾಗಿದ್ದು ಅದು ಕುಸಿತಕ್ಕೊಳಗಾಗಿತ್ತು. ಶಿವಮೊಗ್ಗ ಸಂಸದ ಹಾಗೂ ಬೈಂದೂರು ಶಾಸಕರ ಮುತುವರ್ಜಿಯಿಂದಾಗಿ ನೂತನ ಜೆಟ್ಟಿ ಕಾಮಗಾರಿಗೆ 12 ಕೋಟಿ ರೂ ಅನುದಾನ ಮಂಜೂರಾಗಿ 180 ಮೀಟರ್ ನಷ್ಟು ಕಾಮಗಾರಿ ಮುಗಿದಿತ್ತು. ಮುಂದಿನ ಕಾಮಗಾರಿಗಾಗಿ ಹಳೆ ಜೆಟ್ಟಿಯ ಡಯಾಫ್ರಾಮ್ ಹಾಲ್ ನಡುವೆಯಿದ್ದ ರಾಡ್ ತುಂಡರಿಸಿ ಹೊಸ ಪಿಲ್ಲರ್ ಹಾಕಿದ್ದು, ಎರಡಕ್ಕೂ ಕೊಂಡಿಯಾಗಿದ್ದ ರಾಡನ್ನು ಕತ್ತರಿಸಿ ಅವೈಜ್ಞಾನಿಕ ಕಾಮಗಾರಿ ಮಾಡಿದ್ದರಿಂದಾಗಿ ಹಳೆ ಜೆಟ್ಟಿ ಕುಸಿತಕ್ಕೊಳಗಾಗಿ ಈಗ ನಡೆಯುತ್ತಿರುವ ಕಾಮಗಾರಿಗಾಗಿ ಮಾಡಿದ ಪಿಲ್ಲರ್ ಮೇಲೆ ಬಿದ್ದು ಹಲವು ಪಿಲ್ಲರ್ ಗಳು ಕುಸಿದಿವೆ.
ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ 40 ದೊಡ್ಡ ಬೋಟುಗಳು, 100ಕ್ಕೂ ಅಧಿಕ ಟ್ರಾಲ್ ಬೋಟುಗಳು, ಸಿಂಗಲ್ ಬೋಟುಗಳು, 370 ಬೋಟುಗಳು, 300ಕ್ಕೂ ಅಧಿಕ ನಾಡ ದೋಣಿಗಳು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿವೆ. ಸದ್ಯದ ಪರಿಸ್ಥಿತಿಯಲ್ಲಿ ಮೀನು ಖಾಲಿ ಮಾಡಲು ದೂರದ ಭಟ್ಕಳ ಮೊದಲಾದೆಡೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ.
ಈ ಸಮಸ್ಯೆಗೆ ಶೀಘ್ರವೆ ಪರಿಹಾರ ದೊರಕಿಸಿ ಮೀನುಗಾರರು ಬದುಕು ಕಟ್ಟಿಕೊಳ್ಳಲು ಕ್ರಮಕೈಗೊಳ್ಳದಿದ್ದಲ್ಲಿ ಹೋರಾಟ ನಿಶ್ಚಿತ ಎಂದು ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ ಸಂಘದವರು ಎಚ್ಚರಿಕೆ ನೀಡಿದ್ದಾರೆ.












