ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ

ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.

ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಆಚಾರ್ಯ ಮಾತನಾಡಿ, ಶಿಕ್ಷಣದಿಂದ ಸಮಾಜದಲ್ಲಿ ಸಮಾನತೆ ಸಾಧ್ಯ. ಅವಕಾಶ ವಂಚಿತ ಸಮುದಾಯಗಳಲ್ಲಿನ ವ್ಯಕ್ತಿಗಳನ್ನು ಮುಖ್ಯಭೂಮಿಕೆಗೆ ಕರೆತರುವಲ್ಲಿ ಶಿಕ್ಷಣದ ಪಾತ್ರ ಮಹತ್ವ. ಶಿಕ್ಷಣದಿಂದ ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಪ್ರತಿಯೊಬ್ಬರಲ್ಲೂ ಆತ್ಮಾಭಿಮಾನ ಜಾಗೃತಗೊಳಿಸಬೇಕು. ಸಮಾಜದಲ್ಲಿನ ಅನ್ಯಾಯಗಳ ವಿರುದ್ಧ ಹೋರಾಡುವಂತಾಗಬೇಕು. ಕೇವಲ ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರಾದರೆ ಸಾಲದು, ಮನುಷ್ಯರ
ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಬೇಕು ಎಂದರು.

ಹೆಬ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಮಾರ್ ಎಚ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಂಬೇಡ್ಕರ್ ಚಿಂತನೆಗಳ ಪ್ರಸ್ತುತಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಚಿಂತನೆಗಳ ಕುರಿತು ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಅಕ್ಷಿತಾ, ನರಸಿಂಹ, ಪ್ರತಿಭಾ ಹಾಗೂ ನಂದನ್ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸಾದ್ ರಾವ್ ಎಂ, ಡಾ.ಬಿ.ಆರ್ ಅಂಬೇಡ್ಕರ್ ಚಿಂತನೆಗಳನ್ನು ಪ್ರಸ್ತುತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷಿತಾ ಕೆ ಶೆಟ್ಟಿ ನಿರೂಪಿಸಿ, ವಿಷ್ಣುಮೂರ್ತಿ ಪ್ರಭು ವಂದಿಸಿದರು.