ಹೊಸದಿಲ್ಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಜರಾತ್ನಲ್ಲಿ ನಡೆದ ತಥಾಕಥಿತ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ “ಸಿಲುಕಿಸುವಂತೆ” ತನಿಖಾ ಸಂಸ್ಥೆ ವಿಚಾರಣೆಯ ಸಂದರ್ಭದಲ್ಲಿ ಸಿಬಿಐ ತನ್ನ ಮೇಲೆ “ಒತ್ತಡ” ಹೇರಿತ್ತು. ಆದಾಗ್ಯೂ, ನಾವ್ಯಾರೂ ಗದ್ದಲ ಎಬ್ಬಿಸಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
‘ನ್ಯೂಸ್ 18 ರೈಸಿಂಗ್ ಇಂಡಿಯಾ’ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಸರ್ಕಾರವು ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳನ್ನು “ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂಬ ಪ್ರತಿಪಕ್ಷಗಳ ಆರೋಪದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ತಥಾಕಥಿತ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಮೋದಿಜಿಯನ್ನು (ಅವರು ಗುಜರಾತ್ ಸಿಎಂ ಆಗಿದ್ದಾಗ) “ಸಿಲುಕಿಸುವಂತೆ” ಸಿಬಿಐ ನನ್ನ ಮೇಲೆ ಒತ್ತಡ ಹೇರಿತ್ತು. ಇಷ್ಟೆಲ್ಲಾ ಆದರೂ ಬಿಜೆಪಿ ಯಾವತ್ತೂ ಗದ್ದಲ ಎಬ್ಬಿಸಲಿಲ್ಲ ಎಂದು ಅವರು ಪ್ರತಿಕ್ರಿಯಿಸಿದರು.
ಸೂರತ್ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸಿದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ, ರಾಹುಲ್ ಗಾಂಧಿ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಮತ್ತು ಶಾಸಕಾಂಗದ ಸದಸ್ಯತ್ವವನ್ನು ಕಳೆದುಕೊಂಡ ಏಕೈಕ ರಾಜಕಾರಣಿಯಲ್ಲ. ರಾಹುಲ್ ಗಾಂಧಿ ಅವರು ಉನ್ನತ ನ್ಯಾಯಾಲಯದ ಮೊರೆ ಹೋಗುವ ಬದಲು ತಮ್ಮ ಅಳಲನ್ನು ತೋಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಮತ್ತು ತಮ್ಮ ಅವಸ್ಥೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸುತ್ತಿದ್ದಾರೆ ಎಂದು ಅವರು ಹೇಳಿದರು.
ತೀರ್ಪು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ತಪ್ಪು ಕಲ್ಪನೆಯನ್ನು ಹರಡುತ್ತಿದೆ. ಆದರೆ ನ್ಯಾಯಾಲಯ ತೀರ್ಪು ನೀಡಿದರೆ ಶಿಕ್ಷೆಗೆ ತಡೆ ನೀಡಬಹುದು ಎಂದ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ 2013 ರ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಲಾಲು ಪ್ರಸಾದ್, ಜೆ ಜಯಲಲಿತಾ ಮತ್ತು ರಶೀದ್ ಅಲ್ವಿ ಸೇರಿದಂತೆ 17 ಪ್ರಮುಖ ನಾಯಕರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಚುನಾಯಿತ ಪ್ರತಿನಿಧಿಯು ಶಿಕ್ಷೆಗೊಳಗಾದ ತಕ್ಷಣ ತನ್ನ ಸ್ಥಾನವನ್ನು ಕಳೆದುಕೊಳ್ಳುವುದು ಸುಪ್ರೀಂ ಕೋರ್ಟ್ ಆದೇಶವಾಗಿತ್ತು. ಆದರೆ, ಯಾರೂ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲಿಲ್ಲ, ಏಕೆಂದರೆ ಇದು ದೇಶದ ಕಾನೂನು ಎಂದು ಅವರು ಭಾವಿಸಿದ್ದರು ಎಂದರು.
ದೇಶದ ಕಾನೂನು ಸ್ಪಷ್ಟವಾಗಿದೆ. ಸೇಡಿನ ರಾಜಕಾರಣದ ಪ್ರಶ್ನೆಯೇ ಇಲ್ಲ. ಇದು ಅವರ ಸರ್ಕಾರದ ಅವಧಿಯಲ್ಲಿ ಬಂದ ಭಾರತದ ಸುಪ್ರೀಂ ಕೋರ್ಟ್ನ ತೀರ್ಪು ಎಂದು ಅವರು ಹೇಳಿದರು.
ಈ ಕಾನೂನನ್ನು ಸುಗ್ರೀವಾಜ್ಞೆಯ ಮೂಲಕ ತಡೆಯಲು ಯುಪಿಎ ಸರಕಾರವು ಮಸೂದೆಯನ್ನು ಪರಿಚಯಿಸಲು ಹೊರಟಿದ್ದರೂ ಸ್ವತಃ ರಾಹುಲ್ ಗಾಂಧಿಯೆ ಇದನ್ನು ಹರಿದು ಬಿಸಾಕಿದ್ದರು ಮತ್ತು ಸುಪ್ರೀಂ ಕೋರ್ಟ್ ನ ಆದೇಶವನ್ನು ಯಥಾಸ್ಥಿತಿಯಲ್ಲಿಡಲು ಕರೆ ನೀಡಿದ್ದರು.












