ಸಫಾಯಿ ಕರ್ಮಚಾರಿಗಳಿಗೆ ಸರಕಾರದ ಯೋಜನೆಗಳ ಪ್ರಯೋಜನ ಒದಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಸಫಾಯಿ ಕರ್ಮಚಾರಿಗಳಿಗೆ ಸರಕಾರದ ವಿವಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಿ ಅವರುಗಳು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಫಾಯಿ ಕರ್ಮಚಾರಿಗಳ ಪುರ್ನವಸತಿ ಸೇರಿದಂತೆ ಅವರುಗಳು ಕಲ್ಯಾಣಾಭಿವೃದ್ದಿಗಾಗಿ ಸರಕಾರದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. ಇದರ ಲಾಭವನ್ನು ಅವರುಗಳು ಪಡೆದುಕೊಳ್ಳುವಂತೆ ಮಾಡುವ ಕೆಲಸವಾಗಬೇಕಿದೆ ಎಂದರು.

ಖಾಸಗಿ, ಗುತ್ತಿಗೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳು ಸ್ಚಚ್ಚತಾ ಕಾರ್ಯಗಳನ್ನು ನಿರ್ವಹಿಸುವಾಗ ತಪ್ಪದೇ ಸುರಕ್ಷತಾ ಸಾಧನಗಳನ್ನು ಬಳಸಬೇಕು ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.

ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಸರ್ಕಾರದ ನಿಯಮಾನುಸಾರ ಆಗಿಂದಾಗ್ಗೆ ಮಾಡಿಸಬೇಕು, ಒಂದೊಮ್ಮೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಅವರಿಗೆ ಸೂಕ್ತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲು ಮುಂದಾಗಬೇಕು ಎಂದರು. ಸಫಾಯಿ ಕರ್ಮಚಾರಿಗಳಿಗೆ ಪ್ರತಿಯೊಬ್ಬರಿಗೂ ಗುರುತಿನ ಚೀಟಿಗಳನ್ನು ನಿಗಮದ ವತಿಯಿಂದಲೇ ಶೀಘ್ರದಲ್ಲಿ ವಿತರಣೆ ಮಾಡಬೇಕು ಎಂದ ಅವರು ಸಮುದಾಯ ಭವನ ನಿರ್ಮಾಣಕ್ಕೆ ಮಣಿಪಾಲದಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು ಇದರ ಮಂಜೂರಾತಿಯನ್ನು ಪಡೆದು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಸರ್ಕಾರ ಸಫಾಯಿ ಕರ್ಮಚಾರಿಗಳ ಸಂಘ ಸಂಸ್ಥೆಗಳಿಗೆ ಶೇ.40 ರ ಸಹಾಯಧನದೊಂದಿಗೆ ಸಕ್ಕಿಂಗ್ ಯಂತ್ರ ಖರೀದಿಗೆ ಅವಕಾಶವಿದೆ ಇವುಗಳನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಅಕ್ಷಯ್ ಎಂ ಹಾಕೆ,ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.