ಜೆಡಿಎಸ್-ಬಿಜೆಪಿ ಮೈತ್ರಿಗೆ ಉಡುಪಿ ಜಿಲ್ಲಾ ಜೆಡಿಎಸ್ ಒಪ್ಪಿಗೆ: ಯೋಗೀಶ್ ಶೆಟ್ಟಿ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದು, ಈ ನಿರ್ಣಯಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ಘಟಕ ಸರ್ವಾನುಮತದ ಒಪ್ಪಿಗೆ ಸೂಚಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಂದು ತುರ್ತು ಸಭೆ ನಡೆಸಿ, ವರಿಷ್ಠರ ನಿರ್ಣಯಕ್ಕೆ ಜಿಲ್ಲಾ ಘಟಕದಿಂದ ಸರ್ವಾನುಮತದ ಒಪ್ಪಿಗೆ ಸೂಚಿಸಲಾಗಿದೆ. ಈ ನಿರ್ಣಯವನ್ನು ಪಕ್ಷದ ವರಿಷ್ಠರಿಗೆ ರವಾನಿಸಲಾಗುತ್ತದೆ. ಪಕ್ಷದ ಹಿತದೃಷ್ಟಿಯಿಂದ ಪಕ್ಷದ ವರಿಷ್ಠರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಪರ್ಕಳ, ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಕಾರ್ಕಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶ್ರೀಕಾಂತ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಕ್ಬಾಲ್ ಆತ್ರಾಡಿ ಉಪಸ್ಥಿತರಿದ್ದರು.