ಕೋಟ: ಭಾರೀ ಮಳೆಗೆ ಆಯತಪ್ಪಿ ಸ್ಕೂಟರ್ ಸಮೇತ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕೋಟ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ಕೂಟರ್ ಸವಾರರೊಬ್ಬರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆ ನಡೆದಿದೆ ಎಂದು ವರದಿಯಾಗಿದೆ.

ಮೃತರನ್ನು ಸ್ಥಳಿಯ ನಿವಾಸಿ ದಿವಾಕರ್ ಶೆಟ್ಟಿ( 65) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ತಮ್ಮ ಸ್ಕೂಟರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಮನೆ ಸಮೀಪದ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದಾರೆ. ಸುಮಾರು 15- 20 ಅಡಿ ಆಳದ ಕೆರೆಗೆ ತಡೆಗೋಡೆ ಇಲ್ಲವಾಗಿದ್ದು, ಇತ್ತಲಿಂದ ಭಾರೀ ಮಳೆಯೂ ಸುರಿಯುತ್ತಿದ್ದುದರಿಂದ ನಿಯಂತ್ರಣ ತಪ್ಪಿ ಸ್ಕೂಟರ್ ಸಮೇತ ಕೆರೆಗೆ ಬಿದ್ದಿದ್ದಾರೆ.

ಕೂಡಲೇ ಗಮನಿಸಿದ ಸ್ಥಳೀಯರು ಪೊಲೀಸರಿಗೆ, ಅಗ್ನಿಶಾಮಕ ದಳದವರಿಗೆ ಹಾಗೂ ಮುಳುಗುತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಕೆರೆಗೆ ಧುಮುಕಿ ಮೊದಲು ಸ್ಕೂಟರ್ ಅನ್ನು ಮೇಲಕ್ಕೆ ಎತ್ತಿದ್ದಾರೆ. ಬಹಳ ಹುಡುಕಾಟ ನಡೆಸಿದ ಬಳಿಕ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.