ಅಟಲ್ ಉತ್ಸವ: ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನುಡಿಯಾದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ

ಉಡುಪಿ: ಬಿಜೆಪಿಯ ವಿಧಾನಸಭಾ ಚುನಾವಣೆಯ ಮುನ್ನುಡಿಯಾಗಿ ನಗರದ ಎಂಜಿಎಂ ಕಾಲೇಜು ಮೈದಾನದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದ ಅಂಗವಾಗಿ ಅಟಲ್ ಉತ್ಸವ ಆಯೋಜಿಸಲಾಗಿದ್ದು ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ ಭಾನುವಾರ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ‘ಬೂತ್ ಸಂಗಮ’ದಲ್ಲಿ ನಗರ ಮತ್ತು ಗ್ರಾಮಾಂತರ ಭಾಗದ 226 ಮತಗಟ್ಟೆಗಳಿಂದಲೂ ಕಾರ್ಯಕರ್ತರು ಭಾಗವಹಿಸಿ ಇತಿಹಾಸ ನಿರ್ಮಿಸಿದರು.

Image

 

ಮುಂಬರುವ ವಿಧಾನಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮಂಥನ ನಡೆಸಲಾಯಿತು. ಜ.2ರಿಂದ 12ರವರೆಗೆ ರಾಜ್ಯದಾದ್ಯಂತ ಬೂತ್ ಅಭಿಯಾನ ನಡೆಯಲಿದ್ದು 5 ಪ್ರಮುಖ ವಿಚಾರಗಳಿಗೆ ಒತ್ತು ನೀಡಲಾಗುವುದು. 12 ಮಂದಿಯನ್ನೊಳಗೊಂಡ ಬೂತ್‌ ಸಮಿತಿ ರಚಿಸುವುದು, ಪೇಜ್ ಪ್ರಮುಖ್‌ಗಳ ನೇಮಕ, ವಾಟ್ಸ್‌ ಆ್ಯಪ್‌ಗಳ ಗ್ರೂಪ್ ರಚನೆ, ಮನೆಗಳ ಮೇಲೆ ಧ್ವಜ ಹಾರಿಸುವುದು ಹಾಗೂ ಬೂತ್ ಮಟ್ಟದಲ್ಲಿ ಪ್ರಧಾನಿ ಮೋದಿ ಅವರ ಮನ್‌ ಕಿ ಬಾತ್ ಕಾರ್ಯಕ್ರಮ ವೀಕ್ಷಿಸುವುದು ಹಾಗೂ ಬೂತ್ ಸಭೆ ಸೇರಿದಂತೆ ಜ.21ರಿಂದ 29ರವರೆಗೆ ಮನೆ ಮನೆ ಸಂಪರ್ಕ ಅಭಿಯಾನ ನಡೆಯಲಿದ್ದು, ಪ್ರತಿ ಮನೆಗೂ ಬಿಜೆಪಿ ಅಭಿವೃದ್ಧಿ ಕಾರ್ಯಗಳ ಕರಪತ್ರ ವಿತರಣೆ ನಡೆಯಲಿದೆ ಎಂದು ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಕಾರ್ಯಕ್ರಮದಲ್ಲಿ ತಿಳಿಸಿದರು.

ಶಾಸಕ ರಘುಪತಿ ಭಟ್ ಮಾತನಾಡಿ ಪಕ್ಷದ ಆಡಳಿತಾವಧಿಯಲ್ಲಿ ನಡೆದ ಅಭಿವೃದ್ದಿ ಕಾರ್ಯಗಳ ಮಾಹಿತಿ ನೀಡಿದರು.

Image

ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ 2018 ರಿಂದ ಮಂಜೂರಾದ ಯೋಜನೆ ಹಾಗೂ ಕಾಮಗಾರಿ ವಿವರಗಳ ಕಿರುಹೊತ್ತಿಗೆ ಮತ್ತು ಕೃಷಿ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

Image

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಮಟ್ಟಾರ್ ರತ್ನಾಕರ ಹೆಗ್ಡೆ, ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್, ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ವೀಣಾ ಶೆಟ್ಟಿ, ಸಂಚಾಲಕಿ ರಶ್ಮಿತಾ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್ ಸ್ವಾಗತಿಸಿದರು. ಸಂಚಾಲಕ ರಾಘವೇಂದ್ರ ಕಿಣಿ ನಿರೂಪಿಸಿದರು.

ಕಾರ್ಯಕ್ರಮದ ಅಂಗವಾಗಿ ಪ್ರಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಸಂಗೀತ ರಸಮಂಜರಿ ನಡೆಯಿತು.