ಉಡುಪಿ: ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖಾ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಪರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್ನಡಿ RSK Login ಅಥವಾ Citizen Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಯನ್ನು ಬಳಸಿಕೊಂಡು ಆನ್ಲೈನ್ ಮೂಲಕ ಆಗಸ್ಟ್ 31 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕಳೆದ 5 ವರ್ಷದ ಅವಧಿಯಲ್ಲಿ ಕೃಷಿ ಪ್ರಶಸ್ತಿ ಬಹುಮಾನ ಪಡೆದ ರೈತರು ಹಾಗೂ ರೈತ ಮಹಿಳೆಯರು ಆ ಹಂತದ ಬೆಳೆ ಸ್ಪರ್ಧೆಯಲ್ಲಿ ಪುನಃ ಭಾಗವಹಿಸುವಂತಿಲ್ಲ. ಆದರೆ ಸದ್ರಿ ಬೆಳೆಯ ಮೇಲಿನ ಹಂತದ ಸ್ಪರ್ಧೆಗೆ ಭಾಗವಹಿಸಲು ಅವಕಾಶವಿರುತ್ತದೆ.
ಹಿಂದಿನ 5 ವರ್ಷಗಳಲ್ಲಿ ರಾಜ್ಯ ಮಟ್ಟದ ಬೆಳೆ ಸ್ಪರ್ಧೆಯಲ್ಲಿ ಯಾವುದೇ ಹಂತದ ಬಹುಮಾನ ಪಡೆದಿದ್ದರೂ ಅಂತಹ ರೈತರ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಕನಿಷ್ಟ 1 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದಿರಬೇಕು ಹಾಗೂ ರೆವಿನ್ಯೂ ದಾಖಲೆಯ ಪ್ರಕಾರ ಖಾತೆ ಹೊಂದಿರುವ ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ರೈತರಾಗಿರಬೇಕು. ಕುಟುಂಬದ ಒಬ್ಬರು ಮಾತ್ರ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಆನ್ಲೈನ್ ಮುಖಾಂತರ ನೋಂದಾಯಿಸುವ ರೈತರು ಹಾಗೂ ರೈತ ಮಹಿಳೆಯರು ಇಲಾಖೆಯಿಂದ ಮಾರ್ಗಸೂಚಿಯನ್ವಯ ನಿಗದಿಪಡಿಸುವ ಸ್ಪರ್ಧಾತ್ಮಕ ಇಳುವರಿ ಮಟ್ಟಕ್ಕಿಂತ ಹೆಚ್ಚಿನ ಇಳುವರಿ ಪಡೆದಲ್ಲಿ ಮಾತ್ರ ಬೆಳೆ ಸ್ಪರ್ಧೆಯಡಿ ಬಹುಮಾನಕ್ಕೆ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದçದ ಕೃಷಿ ಅದಿsಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.















