ಉಡುಪಿ: ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರೇ ಇಂದು ಭಕ್ತರು ಸಮರ್ಪಿಸಿದ ಕಾಣಿಕೆಗಳ ಹುಂಡಿಗೆ ಕೈ ಹಾಕಿದ್ದಾರೆ. ಇದರ ನೈತಿಕ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹಿಸಿದರು.
ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಯೋಧ್ಯೆಯ ಶ್ರೀರಾಮ ಮಂದಿರದಂತಹ ಧಾರ್ಮಿಕ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು ದೇಶದ ರಾಜಕೀಯ ಚಿತ್ರಣವನ್ನು ಬದಲಾಯಿಸಿತು.
ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಮಮಂದಿರದ ಪ್ರತಿಷ್ಠಾಪನಾ ಪೂಜೆಯನ್ನು ನೆರವೇರಿಸಿದ್ದರು. ಭಕ್ತರ ಕಾಣಿಕೆ ಹಣದ ದುರ್ಬಳಕೆ ದೇಶದ ಲಕ್ಷಾಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ.
ದೇಶದ ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿರುವ ಈ ಪ್ರಕರಣದ ನೈತಿಕ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊರಬೇಕು ಎಂದು ಒತ್ತಾಯಿಸಿದರು.















