ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಸಿನಿಮಾ ಹಾಡು ಬಳಕೆ ಆರೋಪ: ಹೈಕೋರ್ಟ್ ವತಿಯಿಂದ ತೀರ್ಪು ತಡೆ

ಬೆಂಗಳೂರು : ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಸಿನಿಮಾದ ಹಾಡು ಬಳಕೆ ಮಾಡಿಕೊಂಡು ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗು ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲು ಕೋರಿ ಕಾಂಗ್ರೆಸ್ ಪಕ್ಷದ ಸಂವಹನಾ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥ ಸುಪ್ರಿಯಾ ಶ್ರೀನಾಟೆ ಮತ್ತು ರಾಹುಲ್ ಗಾಂಧಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು. ಅಲ್ಲದೆ, ಅರ್ಜಿ ಇತ್ಯರ್ಥವಾಗುವವರೆಗೂ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನೇ ಅರ್ಜಿ ಇತ್ಯರ್ಥ ವಾಗುವವರೆಗೂ ವಿಸ್ತರಿಸಿ ವಿಚಾರಣೆ ಮುಂದೂಡಿದೆ.

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ದೇಶಾದ್ಯಂತ ಪ್ರವಾಸ ಮಾಡಿದ್ದರು.

ಕರ್ನಾಟಕದಲ್ಲಿ 21 ದಿನಗಳನ್ನು ಕಳೆದಿದ್ದರು. ಸೆಪ್ಟೆಂಬರ್ 31, 2022 ರಿಂದ ಅಕ್ಟೋಬರ್ 19, 2022ರವರೆಗೆ ಏಳು ಜಿಲ್ಲೆಗಳನ್ನು ಒಳಗೊಂಡ 511 ಕಿಲೋಮೀಟರ್ ದೂರ ಪ್ರಯಾಣಿಸಿದ್ದರು. ಚಾಮರಾಜನಗರದಿಂದ ಯಾತ್ರೆ ಆರಂಭಿಸಿದ ರಾಹುಲ್ ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಂಚರಿಸಿದ್ದರು

ಅರ್ಜಿದಾರರ ಪರ ವಾದ ಮಂಡಿಸಿ ಹಿರಿಯ ವಕೀಲ ವಿಕ್ರಮ ಹುಯಿಲಗೋಳ, ಪ್ರಕರಣದಲ್ಲಿ ಭಾರತೀಯ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಟ್ವಿಟರ್ ಖಾತೆಗಳನ್ನು ಮೊದಲನೆಯ ಮತ್ತು ಎರಡನೇ ಅರ್ಜಿದಾರರು ನಿರ್ವಹಣೆ ಮಾಡುತ್ತಿದ್ದಾರೆ. ಮೂರನೇ ಅರ್ಜಿದಾರ ರಾಹುಲ್ ಗಾಂಧಿ ನಡೆದು ಹೋಗುವ ದೃಶ್ಯಕ್ಕೆ ಸಿನಿಮಾದ ಹಾಡನ್ನು ಸೇರಿಸಲಾಗಿದೆ. ಇದರಲ್ಲಿ ಅವರ ಪಾತ್ರ ಇಲ್ಲ. ಆದರೂ ಅವರನ್ನು ಪ್ರಕರಣದಲ್ಲಿ ಸೇರಿಸಲಾಗಿದೆ. ಹೀಗಾಗಿ ಪ್ರಕರಣ ರದ್ದು ಮಾಡಬೇಕು ಎಂದು ಕೋರಿದರು.

ಎಂಆರ್ಟಿ ಮ್ಯೂಸಿಕ್ ಪರ ವಾದ ಮಂಡಿಸಿದ ವಕೀಲರು, ಈ ಹಿಂದೆ ಇದೇ ಆರೋಪ ಸಂಬಂಧ ಕಾಂಗ್ರೆಸ್ ಪಕ್ಷ ಮತ್ತು ಭಾರತ್ ಜೋಡೋ ಸಂಬಂಧಿತ ಟ್ವಿಟರ್ ಖಾತೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ಹೌದು ನಾವು ಕೆಜಿಎಫ್ 2 ಸಂಗೀತವನ್ನು ತಪ್ಪಾಗಿ ಬಳಸಿಕೊಂಡಿದ್ದೇವೆ.

ಅದನ್ನು ತೆಗೆದು ಹಾಕಲಾಗುವುದು ಎಂದು ಭರವಸೆ ನಿಡಿದ್ದರು. ಆದರೆ, ಇಂದಿಗೂ ಅದನ್ನು ಮಾರ್ಪಡಿಸಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಿದ್ದಾರೆ. ಅರ್ಜಿದಾರರ ಪರ ವಕೀಲರಾದ ಲೀಲಾ ದೇವಾಡಿಗ ವಕಾಲತ್ತು ವಹಿಸಿದ್ದಾರೆ.