ಮಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆಯಿಂದ ಬೈಕ್ನಲ್ಲಿ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧಿಸಿದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದ ಬಳಿಕ ಜಾರಿಯಲ್ಲಿದ್ದ ರಾತ್ರಿ ನಿಷೇಧಾಜ್ಞೆಯು ಕೂಡಾ ನಾಳೆ ಬೆಳಿಗ್ಗೆ ತೆರವಾಗಲಿದೆ.
ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ನಡೆಸಿದ ಸಭೆಯ ಬಳಿಕ ರಾತ್ರಿ ಕರ್ಫ್ಯೂ ಸಡಿಲಿಕೆ ಬಳಿಕ ಬೈಕ್ನಲ್ಲಿ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರಂತೆ ಸಂಜೆ 4 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ , ವಾರದವರೆಗೆ 18 ವರ್ಷಕ್ಕೆ ಮೇಲ್ಪಟ್ಟ 60 ವರ್ಷದೊಳಗಿನ ಪುರುಷರ ಬೈಕ್ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.
ಆದರೆ ಹಿಂಬದಿ ಸವಾರರಿಗೆ ನಿರ್ಬಂಧ ಹೇರಿದ ಆದೇಶಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾದ ಬಳಿಕ, ಈ ಆದೇಶವನ್ನು ಸಂಜೆ 5 ಗಂಟೆಯ ಮೊದಲೇ ವಾಪಸ್ ಪಡೆಯಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.












