ಮಂಗಳೂರು: ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಇಂದು ಖ್ಯಾತ ಆ್ಯಂಕರ್ ಕಂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿದ್ದಾರೆ.
ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಸಿಸಿಬಿ ತಂಡ ಅನುಶ್ರೀಯನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.
ವಿಚಾರಣೆ ನಂತರ ಸಿಸಿಬಿ ಕಚೇರಿಯಿಂದ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಅನುಶ್ರೀ, ಬಂಧಿತ ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ರಾಜ್ ಪರಿಚಯವಿದ್ದ ಹಿನ್ನೆಲೆಯಲ್ಲಿ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಕೋರಿದ್ದರು. ಅದರಂತೆ ಇಂದು ವಿಚಾರಣೆಗೆ ಹಾಜರಾಗಿ ನನಗೆ ತಿಳಿದಿರುವ ಮಾಹಿತಿ ನೀಡಿದ್ದೇನೆ ಎಂದರು.
ಡ್ರಗ್ಸ್ ಪಾರ್ಟಿ ವಿಚಾರಕ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪಾರ್ಟಿಗಳಲ್ಲಿ ಭಾಗಿಯಾಗಿದ್ದೇನೆಂಬ ವಿಚಾರದ ಬಗ್ಗೆ ನನ್ನನ್ನು ವಿಚಾರಣೆಗೆ ಕರೆದಿಲ್ಲ. ಬಂಧಿತ ಆರೋಪಿಗಳು ನನ್ನ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿದ್ದರು. ಈ ಕಾರಣಕ್ಕಾಗಿ ವಿಚಾರಣೆಗೆ ಕರೆದಿದ್ದರು. ಕಿಶೋರ್ ಅಮನ್ ಶೆಟ್ಟಿ ಹಾಗೂ ತರುಣ್ ಇವರಿಬ್ಬರು ಕೂಡಾ 12 ವರ್ಷಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ನನ್ನ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿದ್ದರು ಎಂದು ಹೇಳಿದರು.
ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು, ಮತ್ತೆ ವಿಚಾರಣೆಗೆ ಕರೆದಿಲ್ಲ. ಮತ್ತೆ ಕರೆದರೆ ಹಾಜರಾಗುತ್ತೇನೆ ಎಂದರು.