ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ಒದಗಿಸಲು ಗೃಹ ಸಚಿವರಿಗೆ ಮನವಿ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಪಟ್ತು ಕೊಲೆಯಾದ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಗೌಡ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ ನೀಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾದ ಬಂಗೇರ, ರಾಜ್ಯದಲ್ಲಿ ಸೌಜನ್ಯ ಪರ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಪೊಲೀಸ್ ಇಲಾಖೆ ರಕ್ಷಣೆ ಬೇಕಾಗಿದೆ. ಈ ಹತ್ಯೆಯ ಹಿಂದೆ ಬಲಾಢ್ಯರಿದ್ದು, ಮಹೇಶ್ ಶೆಟ್ಟರ ಜೀವಕ್ಕೆ ರಕ್ಷಣೆ ಬೇಕಾಗಿದೆ. ಅವರ ಜತೆ ಮಹಿಳಾ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದ್ದರಿಂದ ಇವರಿಗೆ ರಕ್ಷಣೆ ನೀಡಬೇಕು ಎಂದು ಮಾಜಿ ಶಾಸಕ ವಸಂತ ಬಂಗೇರ ಕೋರಿದ್ದಾರೆ.

ಈ ಬಗ್ಗೆ ಜಿಲ್ಲಾ ಎಸ್ಪಿ ಗುಪ್ತಚರ ಮಾಹಿತಿ ಸಂಗ್ರಹಿಸಿದಾಗ ಮಹೇಶ್ ಶೆಟ್ಟಿಯವರಿಗೆ ಯಾವುದೇ ಬೆದರಿಕೆ ಅಥವಾ ಜೀವಭಯ ಇರಲಿಲ್ಲ ಹಾಗಾಗಿ ತಿಮರೋಡಿ ನೀಡಿದ್ದ ಮನವಿಗೆ ಸ್ಪಂದನೆ ಸಿಕ್ಕಿರಲಿಲ್ಲ ಎಂದರು. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಸ್ಪಂದಿಸಿರುವ ಗೃಹ ಸಚಿವರು, ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಲು ಪೊಲೀಸ್ ಇಲಾಖೆಗೆ ಆದೇಶ ನೀಡಿದ್ದಾರೆ. ವರದಿಗಳ ಪ್ರಕಾರ ಇಬ್ಬರು ಶಸ್ತ್ರಸಜ್ಜಿತ ಗನ್ ಮ್ಯಾನ್ ಗಳು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ನಿಲ್ಲಲಿದ್ದಾರೆ ಎನ್ನಲಾಗಿದೆ.