ಮಂಗಳೂರು: ಮಂಗಳೂರಿನ ಬಜ್ಪೆ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ವಿಮಾನ ನಿಲ್ದಾಣದ ಹಿಂದಿನ ನಿರ್ದೇಶಕರಾಗಿದ್ದ ವಾಸುದೇವ್ ರಾವ್ ಅವರ ಮೊಬೈಲ್ಗೆ ವ್ಯಕ್ತಿಯೊಬ್ಬ ಕರೆ ಮಾಡಿ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದನು. ತಕ್ಷಣವೇ ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿದೆ.
ವಿಮಾನ ನಿಲ್ದಾಣಕ್ಕೆ ಯಾವುದೇ ನೇರ ಬೆದರಿಕೆ ಕರೆ ಬಂದಿಲ್ಲ.ಆದರೆ ಮಾಜಿ ನಿರ್ದೇಶಕರ ಮೊಬೈಲ್ಗೆ ಹುಸಿಬಾಂಬ್ ಕರೆ ಬಂದಿದ್ದು, ಅವರು ಕೂಡಲೇ ನಮ್ಮ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಯಾವುದೇ ಆತಂಕಕಾರಿ ಪರಿಸ್ಥಿತಿ ಇಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಹೆಬ್ರಿಯ ವ್ಯಕ್ತಿ ಬಂಧನ:
ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿಯ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.