ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ನಿನ್ನೆ ರಾತ್ರಿ ಧರ್ಮಸ್ಥಳದಲ್ಲಿ ತಂಗಿದ್ದ ಅವರು ಇಂದು ಮುಂಜಾನೆ ದೇವಸ್ಥಾನಕ್ಕೆ ಭೇಟಿ ನೀಡಿದರು.

ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಧರ್ಮಸ್ಥಳದವರೆಗೆ ಕಾರ್ಯಕರ್ತರು ಬೈಕ್ ಮೆರವಣಿಗೆ ನಡೆಸಿದರು.

ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.