ಮಂಗಳೂರು: ಕೋವಿಡ್19 ಪಾಸಿಟಿವ್ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ.
ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿದೆ. ಇವರೂ ಕೂಡಾ ಇಂದು ಡಿಸ್ಚಾಜ್೯ ಆಗಿದ್ದಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕರೋನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ.
ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕರೋನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ. ಇನ್ನೂ 10 ತಿಂಗಳ ಮಗುವಿನ ಕರೋನಾ ಪ್ರಕರಣವು, ರಾಜ್ಯದಲ್ಲೇ ವಿಶಿಷ್ಟ ಪ್ರಕರಣವಾಗಿತ್ತು.
ಕೇವಲ ಎದೆ ಹಾಲು ಕುಡಿಯುವ ಪುಟ್ಟ ಕಂದನಿಗೆ ಕರೋನಾ ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು. ಪುಟ್ಟ ಮಗುವಿನ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ಬಹಳ ಸೂಕ್ಷ್ಮವಾಗಿತ್ತು. ವೈದ್ಯರು ಈ ಸವಾಲನ್ನು ಬಹಳ ನಾಜೂಕಾಗಿ ನಿರ್ವಹಿಸಿದ್ದು, ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ. ಅಲ್ಲದೇ ಮಗುವಿನ ಗ್ರಾಮದಲ್ಲಿ ಯಾರಿಗೂ ಕರೋನಾ ಹರಡದಿರುವುದು ಸಮಾಧಾನಕರ ವಿಷಯವಾಗಿದೆ. ಮಗುವಿಗೆ ಕರೋನಾ ದೃಟಪಟ್ಟ ನಂತರ ಇಡೀ ಸಜೀಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಿ, ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ ಒದಗಿಸಿತ್ತು.