ದೈನಂದಿನ ಬದುಕಿನಲ್ಲಿ ಬಸವಣ್ಣನವರ ವಚನ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು : ಜಿಲ್ಲಾಧಿಕಾರಿ

ಉಡುಪಿ: ಸಮಾಜದಲ್ಲಿನ ಅಸಮಾನತೆ ,ಮೂಡನಂಬಿಕೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ, ಜನಸಾಮಾನ್ಯರಿಗೂ ಅರ್ಥವಾಗುವಂತೆ, ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ತಮ್ಮ ವಚನಗಳ ಮೂಲಕ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಲೋಕದ ಡೊಂಕ ನೀವೇಕೆ ತಿದ್ದುವರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಎಂಬ ಬಸವಣ್ಣನವರ ವಚನದಂತೆ ಪ್ರತಿಯೊಬ್ಬರೂ ತಮ್ಮ ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಬೇಕು. ವೇದವನ್ನು ಓದಿದವರು ದೊಡ್ಡವರಲ್ಲ ಜನರ ವೇದನೆಯನ್ನು ಓದಿದವರು ದೊಡ್ಡವರು ಎಂಬ ಸಂದೇಶದಂತೆ ಜಿಲ್ಲೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನನಿತ್ಯ ತಮ್ಮ ಕಚೇರಿಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು, ದೈನಂದಿನ ಬದುಕಿನಲ್ಲಿ ಬಸವಣ್ಣನವರ ವಚನಗಳ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ನಾಡೋಜ ಕೆ.ಪಿ.ರಾವ್, ಬಸವಣ್ಣನವರಲ್ಲಿದ್ದ ಮನೋ ನೈರ್ಮಲ್ಯ ಮತ್ತು ಸಮದೃಷ್ಟಿ ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ. ಅನುಭವ ಮಂಟಪದ ಮೂಲಕ ಚರ್ಚೆಗಳನ್ನು ನಡೆಸಿ ಸರಳವಾದ ಭಾಷೆಯಲ್ಲಿ ಜನಸಾಮಾನ್ಯರಿಗೆ ಸಂದೇಶಗಳನ್ನು ನೀಡಿದ ಬಸವಣ್ಣ ಅವರ ಜನನ ಭುವನದ ಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಅಪರ ಜಿಲ್ಲಾಧಿಕಾರಿ ವೀಣಾ, ಉಡುಪಿ ತಹಸೀಲ್ದಾರ್ ಅರ್ಚನಾ ಭಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉಡುಪಿ ಚಿತ್ರಕಲಾ ಮಂದಿರದ ಪ್ರಾಂಶುಪಾಲ ನಿರಂಜನ್, ಜಿಲ್ಲಾ ಬಸವ ಸಮಿತಿ ಉಪಾಧ್ಯಕ್ಷ ಸೋಮನಾಥ್, ಕಾರ್ಯದರ್ಶಿ ಸುರೇಶ್, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು
ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು, ಕಲಾವಿದ ಶಂಕರ್ ದಾಸ್ ನಿರೂಪಿಸಿ, ವಂದಿಸಿದರು.