ಬಸ್ರೂರು ಅಪ್ಪಣ್ಣ ಹೆಗ್ಡೆ ವಿಧಿವಶ

ಉಡುಪಿ: ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. ಅಪ್ಪಣ್ಣ ಹೆಗ್ಡೆ 1983-85ರ ಅವಧಿಯಲ್ಲಿ ಬೈಂದೂರಿನಿಂದ ಜನತಾ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಆನಂತರ 1988-94ರ ಅವಧಿಗೆ ವಿಧಾನ ಪರಿಷತ್ ಗೆ ಸದಸ್ಯರಾಗಿ ಆಯ್ಕೆಯಾಗಿದ್ದರು.

ಅಪ್ಪಣ್ಣ ಹೆಗ್ಡೆ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೇ ಸುದೀರ್ಘ ಕಾಲ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.